ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠದಿಂದ ಅರವಿಂದ ಕೇಜ್ರಿವಾಲ್ ಅರ್ಜಿ ವಿಚಾರಣೆ ನವದೆಹಲಿ: ದೆಹಲಿ ಅಬಕಾರಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ತಮ್ಮನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ತ್ರಿಸದಸ್ಯ ಪೀಠ ಇಂದು (ಶುಕ್ರವಾರ) ವಿಚಾರಣೆ ನಡೆಸಲಿದೆ. ಕೇಜ್ರಿವಾಲ್ ‍‍ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಕೋರ್ಟ್‌ನಲ್ಲಿ ಹಾಜರಿದ್ದು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್‌ ಪೀಠದ ಮುಂದೆ ಭಿನ್ನವಿಸಿಕೊಂಡರು. ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಪೀಠದ ಮುಂದೆ ಉಲ್ಲೇಖಿಸಿ ಎಂದು ಸಿಜೆಐ ಸಿಂಘ್ವಿ ಅವರಿಗೆ ಸೂಚಿಸಿದರು. ಸಂಜೀವ್‌ ಖನ್ನಾ ಪೀಠದ ಮುಂದೆ ಸಿಂಘ್ವಿ ಅವರು ಪ್ರಕರಣವನ್ನು ಉಲ್ಲೇಖಿಸಿದರು. ಮೂವರು ನ್ಯಾಯಮೂರ್ತಿಗಳ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿ ಖನ್ನಾ ತಿಳಿಸಿದರು. ‌ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.