ಮೋದಿ ಸರ್ಕಾರದ 'ವಿಕಸಿತ ಭಾರತ' ಸಂದೇಶ ಕೂಡಲೇ ನಿಲ್ಲಿಸಿ: ಚುನಾವಣಾ ಆಯೋಗ ನವದೆಹಲಿ: 'ವಿಕಸಿತ ಭಾರತ'ಕ್ಕೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮೂಲಕ ಹರಿದಾಡುತ್ತಿರುವ ಸಂದೇಶವನ್ನು ಕೂಡಲೇ ತಡೆಹಿಡಿಯಬೇಕು ಎಂದು ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಗುರುವಾರ ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರವೂ ಜನರ ಮೊಬೈಲ್‌ಗಳಿಗೆ ಈ ಸಂದೇಶ ಬರುತ್ತಿದೆ ಎಂದು ಹಲವರು ದೂರು ನೀಡಿದ್ದಾರೆ ಎಂದು ಆಯೋಗ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಉದ್ದೇಶಿಸಿ ಬರೆದ ಪತ್ರದೊಂದಿಗೆ ವಿಕಸಿತ ಭಾರತ ಕುರಿತ ಸಂದೇಶವನ್ನು ಮಾದರಿ ನೀತಿ ಸಂಹಿತೆ ಜಾರಿಗೂ ಮುನ್ನ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಲಾಗಿತ್ತು. ಸಂದೇಶಗಳು ತಾಂತ್ರಿಕ ಹಾಗೂ ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ತಡವಾಗಿ ವಿತರಣೆಯಾಗಿರಬಹುದು ಎಂದು ಆಯೋಗಕ್ಕೆ ಸಚಿವಾಲಯ ಮಾಹಿತಿ ನೀಡಿದೆ. ‘ವಿಕಸಿತ ಭಾರತ’ ಕುರಿತ ಸಂದೇಶಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್, ನೀತಿ ಸಂಹಿತೆ ಉಲ್ಲಂಘಿಸಿರುವುದಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.