ರಾಹುಲ್ ಗಾಂಧಿ ವಿರುದ್ಧದ ಜಾಮೀನುರಹಿತ ಬಂಧನ ವಾರೆಂಟ್‌ಗೆ ಜಾರ್ಖಂಡ್ ಹೈಕೋರ್ಟ್ ತಡೆ ರಾಂಚಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್‌ನ ಚಾಯ್‌ಬಾಸಾ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ಬಂಧನ ವಾರೆಂಟ್‌ಗೆ ಜಾರ್ಖಂಡ್ ಹೈಕೋರ್ಟ್ ತಡೆ ನೀಡಿದೆ. ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಫೆಬ್ರುವರಿ 27ರಂದು ಚಾಯ್‌ಬಾಸಾ ವಿಶೇಷ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ವಾರೆಂಟ್ ಪ್ರಶ್ನಿಸಿ ರಾಹುಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 30 ದಿನಗಳ ಕಾಲ ವಾರೆಂಟ್ ಜಾರಿ ಮಾಡದಂತೆ ತಡೆ ವಿಧಿಸಿದೆ. 2019ರ ಲೋಕಸಭಾ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ, ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರತಾಪ್ ಕುಮಾರ್ ಎಂಬವರು ಈ ಸಂಬಂಧ ರಾಹುಲ್ ವಿರುದ್ಧ ದಾವೆ ಹೂಡಿದ್ದರು. ರಾಹುಲ್ ಗಾಂಧಿ ಹೇಳಿಕೆ ಮಾನಹಾನಿಕರವಾದದ್ದಾಗಿದೆ. ಅಮಿತ್ ಶಾ ಅವರ ಘನತೆಗೆ ಧಕ್ಕೆ ತರುವ ಉದ್ದೇಶದಿಂದಲೇ ಹೇಳಿಕೆ ನೀಡಲಾಗಿದೆ ಎಂದು ವಾದಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.