| ಜಾರ್ಖಂಡ್‌ನ ಬಿಜೆಪಿ ಶಾಸಕ ಕಾಂಗ್ರೆಸ್‌ಗೆ ಸೇರ್ಪಡೆ ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್, ಕಾಂಗ್ರೆಸ್‌ಗೆ ಸೇರಿದ್ದಾರೆ. ಜಾರ್ಖಂಡ್‌ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಟೇಲ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಪಟೇಲ್ ಅವರು ಹಜಾರಿಬಾಗ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಾಂಡು ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಹಿಂದೆ ಜಾರ್ಖಂಡ್ ಮುಕ್ತಿ ಮೋರ್ಚಾದ ಶಾಸಕರಾಗಿದ್ದರು. ಮಾಜಿ ಸಂಸದ, ತಮ್ಮ ತಂದೆ ತೆಕ್ ಲಾಲ್ ಮಹ್ತೊ ಕನಸುಗಳನ್ನು ನನಸು ಮಾಡಲು ಬಯಸುವುದಾಗಿ ಪಟೇಲ್ ಹೇಳಿದ್ದಾರೆ. ಎನ್‌ಡಿಎಯಲ್ಲಿ ನನ್ನ ತಂದೆಯ ಸಿದ್ಧಾಂತ ಕಾಣುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ 'ಇಂಡಿಯಾ' ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದ್ದಾರೆ. ರಾಜ್ಯದ ಎಲ್ಲ 14 ಲೋಕಸಭಾ ಕ್ಷೇತ್ರಗಳಲ್ಲಿ 'ಇಂಡಿಯಾ' ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಪಟೇಲ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.