ನ್ಯಾ.ಹೇಮಾ ಸಮಿತಿ ವರದಿ: ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ; ಕೇರಳ ಹೈಕೋರ್ಟ್‌ ಕೊಚ್ಚಿ: ಮಲಯಾಳ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನ್ಯಾಯಮೂರ್ತಿ ಹೇಮಾ ನೇತೃತ್ವದ ಸಮಿತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೇರಳ ಹೈಕೋರ್ಟ್‌ ಗುರುವಾರ ಸೂಚಿಸಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಎ.ಮುಹಮ್ಮದ್‌ ಮುಷ್ತಾಕ್‌ ಹಾಗೂ ನ್ಯಾಯಮೂರ್ತಿ ಎಸ್‌.ಮಾನು ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ಈ ವಿಚಾರವಾಗಿ, ತಿರುವನಂತಪುರ ನಿವಾಸಿ ನವಾಸ್‌ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಪೀಠ, ಸಮಿತಿಯ ವರದಿಯು ಗಂಭೀರ ಆರೋಪಗಳನ್ನು ಒಳಗೊಂಡಿದೆ ಎಂದು ಹೇಳಿದೆ. ಪಿಐಎಲ್‌ಗೆ ಸಂಬಂಧಿಸಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠ, ವರದಿಯಲ್ಲಿನ ಆರೋಪಗಳ ಆಧಾರದಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಸರ್ಕಾರವನ್ನು ಪ್ರಶ್ನಿಸಿದೆ. ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲ, ‘ಯಾರಾದರೂ ದೂರು ನೀಡದ ಹೊರತು ಈ ವಿಚಾರದಲ್ಲಿ ಪ್ರಕರಣ ದಾಖಲಸಲು ಸಾಧ್ಯವಿಲ್ಲ’ ಎಂದು ಪೀಠಕ್ಕೆ ಹೇಳಿದರು. ‘ಸಮಿತಿ ಸಲ್ಲಿಸಿರುವ ವರದಿ ಗೌಪ್ಯ ದಾಖಲೆಯಾಗಿದೆ. ಕತ್ತರಿ ಪ್ರಯೋಗಕ್ಕೆ ಒಳಪಡಿಸದ ಈ ಮೂಲ ವರದಿಯಲ್ಲಿ ಉಲ್ಲೇಖವಾಗಿರುವ ಎಲ್ಲ ಹೆಸರುಗಳ ತನ್ನ ಬಳಿ ಇವೆ ಎಂದೂ ಸರ್ಕಾರ ತಿಳಿಸಿದೆ. ‘ಚಿತ್ರರಂಗದಲ್ಲಿ ಮಹಿಳೆಯರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿ, ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ಸಮಿತಿಗೆ ವಹಿಸಲಾಗಿತ್ತು. ಗೋಪ್ಯತೆ ಕಾಪಾಡುವ ಭರವಸೆ ನೀಡಿದ್ದರಿಂದ ಕೆಲವರು ಸಮಿತಿ ಮುಂದೆ ಹೇಳಿಕೆಗಳನ್ನು ನೀಡಿದ್ದಾರೆ. ಹೀಗಾಗಿ, ಈ ವಿಚಾರವಾಗಿ ಪ್ರಕರಣ ದಾಖಲಿಸುವುದಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಕೆಲ ಮಿತಿಗಳು ಇವೆ ಎಂದೂ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.