ಪ್ರತಿಭಟನಾನಿರತ ರೈತರು ನಮ್ಮ ಅನ್ನದಾತರು | ಮಾತುಕತೆಗೆ ಸಿದ್ಧ: ಅನುರಾಗ್ ಠಾಕೂರ್ ನವದೆಹಲಿ: ನಮ್ಮ ಸಹೋದರರು ಹಾಗೂ ಅನ್ನದಾತರಾದ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆಗೆ ಕೇಂದ್ರ ಸಿದ್ಧವಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಆದಾಯವನ್ನು ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಪಂಜಾಬ್ - ಹರಿಯಾಣ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆಯೇ ಎಂಬ ಪ್ರಶ್ನಿಗೆ ಪ್ರತಿಕ್ರಿಯಿಸಿದ ಸಚಿವರು, ‘ನಾವು ಮಾತುಕತೆಗೆ ಸಿದ್ಧರಿದ್ದೇವೆ. ಇಂದೂ ಸಿದ್ಧರಿದ್ದೇವೆ ಹಾಗೂ ಮುಂದೆಯೂ ಅವರ ಸಮಸ್ಯೆಗಳನ್ನು ಚರ್ಚಿಸಲು ಸಿದ್ಧರಿದ್ದೇವೆ. ಅವರು ನಮ್ಮ ಅನ್ನದಾತರಾಗಿರುವುದರಿಂದ ಮಾತುಕತೆಗೆ ನಮಗೆ ಯಾವುದೇ ಸಮಸ್ಯೆ ಇಲ್ಲ' ಎಂದೂ ಹೇಳಿದ್ದಾರೆ. ರೈತರ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಬುಧವಾರ ಬಿರುಸು ಪಡೆದುಕೊಂಡಿತ್ತು. ರೈತರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಪಂಜಾಬಿನ 21 ವರ್ಷದ ಯುವ ರೈತ ಮೃತಪಟ್ಟು, ಕೆಲ ರೈತರು ಮತ್ತು 12 ಪೊಲೀಸರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ರೈತ ಮುಖಂಡರು ‘ದೆಹಲಿ ಚಲೋ’ಗೆ ಎರಡು ದಿನಗಳ ಮಟ್ಟಿಗೆ ವಿರಾಮ ನೀಡಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿ ಮುಂದಿನ ಕ್ರಮಗಳ ಕುರಿತು ಶುಕ್ರವಾರ ಸಂಜೆ ನಿರ್ಧರಿಸಲಾಗುವುದು ಎಂದು ರೈತ ಮುಖಂಡ ಸರವಣ ಸಿಂಗ್‌ ಪಂಢೇರ್ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.