ಚುನಾವಣೆ: ಉತ್ತರ ಪ್ರದೇಶದಲ್ಲಿ SPಗೆ 63, ಕಾಂಗ್ರೆಸ್‌ಗೆ 17 ಸೀಟು– ರವಿದಾಸ್ ಲಖನೌ: ಉತ್ತರ ಪ್ರದೇಶದಲ್ಲಿ ಕಡೆಗೂ ಮೈತ್ರಿ ಖಾತ್ರಿಪಡಿಸಿದ ಸಮಾಜವಾದಿ ಪಕ್ಷವು ಒಟ್ಟು 80 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 17 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ ಎಂದು ವರದಿಯಾಗಿದೆ. ಪಕ್ಷದ ಮುಖಂಡ ರವಿದಾಸ್ ಮೆಹ್ರೋತ್ರಾ ಅವರು ಈ ವಿಷಯವನ್ನು ಸುದ್ದಿ ಸಂಸ್ಥೆಗಳಿಗೆ ಖಚಿತಪಡಿಸಿದ್ದಾರೆ. ‘ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಈ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಲಿದೆ. ಆ ಮೂಲಕ ‘ಇಂಡಿಯಾ’ ಬಣದ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಜತೆಗೆ ಬಿಜೆಪಿಯೇತರ ಮತಗಳನ್ನು ಕ್ರೋಡೀಕರಿಸಿ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ವಿರೋಧ ಪಕ್ಷಗಳನ್ನು ಹಣಿಯುವ ಸಂಚು ನಡೆಸಿದೆ. ಅದಕ್ಕಾಗಿ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆಯಂತ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದ್ದಾರೆ. ಇಂಡಿಯಾ ಒಕ್ಕೂಟದಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರೂ ಸಹ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೂ ರಾಹುಲ್ ಗಾಂಧಿ ಅವರ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡಿರಲಿಲ್ಲ. ಅಮೇಥಿ, ರಾಯ್‌ಬರೇಲಿ, ಕಾನ್ಪುರ, ಝಾನ್ಸಿ, ಬಾರಾಬಂಕಿ, ಸೀತಾಪುರ, ಕೈಸರ್‌ಗಂಜ್‌, ವಾರಾಣಸಿ, ಅಮ್ರೋಹಾ, ಸಹರಾನ್‌ಪುರ, ಗೌತಮ್‌ ಬುದ್ಧ ನಗರ, ಘಾಜಿಯಾಬಾದ್‌, ಬುಲಂದ್‌ಶಹರ್‌, ಫತೇಪುರ್‌ ಸಿಕ್ರಿ, ಹತ್ರಾಸ್‌, ಮಹಾರಾಜ್‌ಗಂಜ್‌ ಹಾಗೂ ಬಾಗ್‌ಪತ್‌ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಪೈಕಿ, ಕೆಲವು ಸ್ಥಾನಗಳ ಬದಲಾವಣೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಉಭಯ ಪಕ್ಷಗಳ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.