ಸಂದೇಶ್‌ಖಾಲಿ: ಪ್ರಧಾನಿ ಮೋದಿ ಭೇಟಿ ಸಾಧ್ಯತೆ–ಸುವೇಂದು ಅಧಿಕಾರಿ ಕೋಲ್ಕತ್ತ: ಟಿಎಂಸಿ ನಾಯಕ ಷಹಜಹಾನ್‌ ಶೇಖ್‌ ಹಾಗೂ ಅತನ ಬೆಂಬಲಿಗರಿಂದ ನಡೆದಿದೆ ಎನ್ನಲಾದ ದೌರ್ಜನ್ಯದ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ಸಂದೇಶ್‌ಖಾಲಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಗಳಿಗೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಹೇಳಿದ್ದಾರೆ. ವಿರೋಧ ಪಕ್ಷ ನಾಯಕರೂ ಆಗಿರುವ ಸುವೇಂದು ಅಧಿಕಾರಿ ಸೋಮವಾರ ರಾತ್ರಿ 24 ದಕ್ಷಿಣ ಪರಗಣ ಜಿಲ್ಲೆಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ್‌ಖಾಲಿಗೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದರು. ಮಂಗಳವಾರ ಸಂದೇಶ್‌ಖಾಲಿಗೆ ತೆರಳಲು ನನಗೆ ಅನುಮತಿ ಸಿಕ್ಕಿದ್ದು, ಅಲ್ಲಿ ಸಂತ್ರಸ್ತ ಕುಟುಂಬದವರನ್ನು ಭೇಟಿ ಮಾಡುವೆ ಎಂದು ಹೇಳಿದ್ದಾರೆ. ಇದೇ ವೇಳೆ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಅವರು, ಲೋಕಸಭೆ ಚುನಾವಣೆಯಲ್ಲಿನ ಸೋಲಿನ ಭೀತಿಯಿಂದ ಮಮತಾ ಬ್ಯಾನರ್ಜಿ ಇಷ್ಟೆಲ್ಲ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅವರು ಷಹಜಹಾನ್‌ ಶೇಖ್‌ನನ್ನು ಬಂಧಿಸುವುದಿಲ್ಲ, ಯಾಕೆಂದರೆ ಚುನಾವಣೆಯ ಸಮಯದಲ್ಲಿ ಅವರಿಗೆ ಗೂಂಡಾಗಳು ಬೇಕಾಗಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು. ಮಮತಾ ಬ್ಯಾನರ್ಜಿ ಸರ್ಕಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ರೌಡಿಗಳನ್ನು ಮಾತ್ರ ಬೆಳೆಸಿದ್ದಾರೆ ಇನ್ನು ಮುಂದೆ ಅವರ ಆಟ ನಡೆಯುವುದಿಲ್ಲ ಎಂದು ಅಧಿಕಾರಿ, ಮಮತಾ ವಿರುದ್ಧ ತೀವ್ರ ವಾಗ್ದಳಿ ನಡೆಸಿದರು. ಸೋಮವಾರ ಸಂದೇಶ್‌ಖಾಲಿಗೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು, ಸಂದೇಶ್‌ಖಾಲಿಯ ಸ್ಥಿತಿ ಶೋಚನೀಯವಾಗಿದೆ ಎಂದು ಹೇಳಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.