ರಾಷ್ಟ್ರ ರಾಜಧಾನಿಯಲ್ಲಿ 'ಗಂಭೀರ ಸಾಂವಿಧಾನಿಕ ಬಿಕ್ಕಟ್ಟು': ಅರವಿಂದ ಕೇಜ್ರಿವಾಲ್ ನವದೆಹಲಿ: ಬಿಜೆಪಿಯವರಿಂದ ತಮಗೆ ಬೆದರಿಕೆ ಮತ್ತು ಒತ್ತಡವಿದ್ದು, ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ 'ಗಂಭೀರ ಸಾಂವಿಧಾನಿಕ ಬಿಕ್ಕಟ್ಟು' ಎದುರಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ. ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಚಾಲಕರೂ ಆಗಿರುವ ಕೇಜ್ರಿವಾಲ್‌, ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯು ಸಂಪೂರ್ಣ ರಾಜ್ಯ ಸ್ಥಾನಮಾನ ಹೊಂದದೇ ಇರುವುದರಿಂದ ಇಂತಹ ಸಮಸ್ಯೆಗಳು ಉದ್ಭವಿಸಿವೆ. ದೆಹಲಿ ಮೇಲಿನ ನಿಜವಾದ ಅಧಿಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ (ಬಿಜೆಪಿ) ಬಳಿಯಿದೆ. 'ಆ ಪಕ್ಷಕ್ಕೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ತನ್ನ ಕೆಲಸ ಮಾಡುವುದು ಇಷ್ಟವಿಲ್ಲ' ಎಂದು ಆರೋಪಿಸಿದ್ದಾರೆ. ನೀರಿನ ಬಿಲ್‌ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಒಂದು ಬಾರಿ ಮರುಪಾವತಿ (ಒಟಿಎಸ್‌) ಯೋಜನೆ ಜಾರಿಗೊಳಿಸಲು ಕೆಲವು ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ. ಈ ಯೋಜನೆ ಜಾರಿಗೊಳಿಸದಂತೆ ಬಿಜೆಪಿಯು ಅಧಿಕಾರಿಗಳನ್ನು ಬೆದರಿಸುತ್ತಿದೆ ಎಂದು ಕೇಜ್ರಿವಾಲ್‌ ದೂರಿದ್ದಾರೆ. ಅಧಿಕಾರಿಗಳು ಕೆಲಸ ಮಾಡಲು ಮುಂದಾಗದ ಕಾರಣ ದೆಹಲಿಯಲ್ಲಿ ಗಂಭೀರ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಅವರು ಹೇಳಿದ್ದಾರೆ. 10.5 ಲಕ್ಷ ಕುಟುಂಬಗಳು ಯೋಜನೆಯ ಲಾಭ ಪಡೆಯಲಿವೆ. ಹಾಗಾಗಿ, ಯೋಜನೆಯನ್ನು ಜಾರಿಗೊಳಿಸುವಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಅಧಿಕಾರಿಗಳಿಗೆ ಕರೆ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿದ್ದಾರೆ. ಸಿಎಂ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.