ಕೇಂದ್ರ ಸರ್ಕಾರ ರಾಜ್ಯದ ಜನರ ಆಧಾರ್‌ ಕಾರ್ಡ್‌ ನಿಷ್ಕ್ರಿಯಗೊಳಿಸುತ್ತಿದೆ: ಮಮತಾ ಕೋಲ್ಕತ್ತ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ಯೋಜನೆಗಳು ಜನರಿಗೆ ತಲುಪದಂತೆ ತಡೆಯಲು ಆಧಾರ್‌ ಕಾರ್ಡ್‌ ಅನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಆರೋಪಿಸಿದ್ದಾರೆ. ಬಿರ್ಭೂಮ್ ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರು ಸಾಮಾಜಿಕ ಯೋಜನೆಗಳ ಪ್ರಯೋಜನೆ ಪಡೆಯುವುದನ್ನು ತಡೆಯಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳ ಜನರ ಆಧಾರ್ ಕಾರ್ಡ್‌ಗಳನ್ನು ಡಿಲಿಂಕ್‌ ಮಾಡಿದೆ. ಆದರೆ ಆಧಾರ್‌ ಕಾರ್ಡ್‌ ಇಲ್ಲದಿದ್ದರೂ ಪ್ರತಿಯೊಬ್ಬ ಫಲಾನುಭವಿಗೂ ಯೋಜನೆಗಳ ಪ್ರಯೋಜನೆ ಪಡೆಯಲು ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಯಾವ ಫಲಾನುಭವಿಗೂ ತೊಂದರೆಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಹರಿಯಾಣ, ಪಂಜಾಬ್‌ನಲ್ಲಿ ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿ ನಡೆಸುತ್ತಿರುವ ದೆಹಲಿ ಚಲೋ ಉಲ್ಲೇಖಿಸಿ ಮಾತನಾಡಿದ ಬ್ಯಾನರ್ಜಿ, ಬಂಗಾಳದ ರೈತರು ಅಂತಹ ಯಾವುದೇ ಸಮಸ್ಯೆ ಎದುರಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.