ಎನ್‌ಸಿಪಿ ಬಣ ವಿವಾದ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಾಳೆ ನವದೆಹಲಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ನೈಜ ಎನ್‌ಸಿಪಿ ಎಂದು ಚುನಾವಣಾ ಆಯೋಗವು ಪ್ರಕಟಿಸಿರುವುದನ್ನು ಪ್ರಶ್ನಿಸಿ ಶರದ್‌ ಪವಾರ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ, ದೀಪಾಂಕರ್‌ ದತ್ತಾ ಮತ್ತು ಕೆ.ವಿ. ವಿಶ್ವನಾಥನ್‌ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಜಿತ್‌ ಪವಾರ್‌ ಬಣವು ಶಾಸಕರಿಗೆ ವಿಪ್‌ ಜಾರಿಗೊಳಿಸುವ ಸಾಧ್ಯತೆ ಇರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಪಟ್ಟಿ ಮಾಡಬೇಕೆಂದು ಶರದ್‌ ಪವಾರ್‌ ಅವರು ನ್ಯಾಯಾಲಯವನ್ನು ಕೋರಿದ್ದರು. ಇದಕ್ಕೆ ನ್ಯಾಯಾಲಯವು ಸಮ್ಮತಿಸಿತ್ತು. ಇದೇ 20ರಿಂದ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಆರಂಭವಾಗಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.