ಯುಎಇನಿಂದ ಭಾರತಕ್ಕೆ ಕೊಲೆ ಆರೋಪಿ ಕರೆತಂದ ಸಿಬಿಐ ನವದೆಹಲಿ: ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶುಕ್ರವಾರ ಯುಎಇನಿಂದ ಭಾರತಕ್ಕೆ ಕರೆತರಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. 1994ರಲ್ಲಿ ಹರಿಯಾಣದಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯಾಗಿದ್ದ ನರೇಂದರ್‌ ಸಿಂಗ್‌ನನ್ನು 1998ರಲ್ಲಿ ವಿಚಾರಣಾ ನ್ಯಾಯಾಲಯವು ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಆದರೆ 2009ರಲ್ಲಿ ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್ ನರೇಂದರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ವೇಳೆಗಾಗಲೇ ತಲೆಮೆರೆಸಿಕೊಂಡಿದ್ದ ನರೇಂದರ್‌ ಪತ್ತೆಗಾಗಿ ಹರಿಯಾಣ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಹರಿಯಾಣ ಪೊಲೀಸರ ಮನವಿಯ ಹಿನ್ನೆಲೆಯಲ್ಲಿ 2023ರ ನವೆಂಬರ್‌ 7ರಂದು ಸಿಬಿಐ ನರೇಂದರ್‌ ವಿರುದ್ಧ ಇಂಟರ್‌ ಪೋಲ್‌ ರೆಡ್‌ ನೋಟಿಸ್‌ ಜಾರಿಗೊಳಿಸಿತ್ತು. ‘ನರೇಂದರ್‌ ಯುಎಇಯಲ್ಲಿ ಇರುವುದನ್ನು ಪತ್ತೆ ಹಚ್ಚಿದ ಸಿಬಿಐ. ಅಲ್ಲಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಭಾರತಕ್ಕೆ ಕರೆತಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.