ಫೈಬರ್‌ನೆಟ್ ಹಗರಣ | ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಮುಖ ಆರೋಪಿ–ಸಿಐಡಿ ಅಮರಾವತಿ: ಫೈಬರ್‌ನೆಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಐಡಿ ಪೊಲೀಸರು ಶುಕ್ರವಾರ (ಫೆ.16) ವಿಜಯವಾಡ ಎಸಿಬಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರನ್ನು ಪ್ರಮುಖ ಆರೋಪಿ (ಎ1) ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಹೈದರಾಬಾದ್‌ನ ನೆಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿ. ಹರಿಕೃಷ್ಣ ಪ್ರಸಾದ್ ಮತ್ತು ಐಆರ್‌ಟಿಎಸ್ ಅಧಿಕಾರಿ ಕೆ. ಸಾಂಬಶಿವ ರಾವ್ ಅವರನ್ನು ಇತರ ಆರೋಪಿಗಳೆಂದು ಸಿಐಡಿ ( ಅಪರಾಧ ತನಿಖಾ ವಿಭಾಗ) ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿದೆ. ಆಂಧ್ರಪ್ರದೇಶ ಫೈಬರ್‌ನೆಟ್‌ ಯೋಜನೆಯ ಹಂತ–1ರ ಟೆಂಡರ್‌ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೆ ₹330 ಕೋಟಿ ನಷ್ಟವಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಸಹಚರರಿಗೆ ಸೇರಿದ ಕಂಪನಿಗಳ ಮೂಲಕ ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದ್ದಾರೆ ಎಂದು ಸಿಐಡಿ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಐಡಿ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.