ಅಯೋಧ್ಯೆ: ಇನ್ನು ಮುಂದೆ ಬಾಲರಾಮನಿಗೆ ಪ್ರತಿದಿನ ಮಧ್ಯಾಹ್ನ 1 ಗಂಟೆ ವಿಶ್ರಾಂತಿ ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದ ಬಾಗಿಲು ಇನ್ನು ಮುಂದೆ ಪ್ರತಿದಿನ 1 ಗಂಟೆ ಮುಚ್ಚಿರಲಿದೆ. ಈ ವೇಳೆ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಮಂದಿರದ ಪ್ರಧಾನ ಅರ್ಚಕರು ತಿಳಿಸಿದ್ದಾರೆ. ‘ಬಾಲರಾಮ ಇನ್ನೂ ಐದು ವರ್ಷದವನು. ದೀರ್ಘ ಸಮಯದವರೆಗೆ ಎಚ್ಚರವಿರಲು ಸಾಧ್ಯವಿಲ್ಲ. ಬಾಲರಾಮನಿಗೆ ವಿಶ್ರಾಂತಿಯ ಅಗತ್ಯವಿರುತ್ತದೆ. ಹೀಗಾಗಿ ಪ್ರತಿದಿನ ಮಧ್ಯಾಹ್ನ 12.30 ರಿಂದ 1.30ರವರೆಗೆ ದೇವಾಲಯದ ಬಾಗಿಲನ್ನು ಮುಚ್ಚಲು ಟ್ರಸ್ಟ್‌ ನಿರ್ಧರಿಸಿದೆ’ ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಪಿಟಿಐಗೆ ತಿಳಿಸಿದ್ದಾರೆ. ರಾಮ ಮಂದಿರ ಉದ್ಘಾಟನೆಯಾದ ದಿನದಿಂದಲೇ (ಜ.22) ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಅಪಾರ ಪ್ರಮಾಣದಲ್ಲಿ ಭಕ್ತರು ಬರುತ್ತಿದ್ದ ಕಾರಣ ದರ್ಶನದ ಅವಧಿಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ವಿಸ್ತರಿಸಲಾಗಿತ್ತು. ಈ ವೇಳೆ ಲಕ್ಷಾಂತರ ಭಕ್ತರಿಗೆ ಬಾಲರಾಮನ ದರ್ಶನ ಸಿಗುತ್ತಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.