ಕೇರಳ: ವನ್ಯಜೀವಿ ಸಂರಕ್ಷಣಾ ಕಾನೂನು ತಿದ್ದುಪಡಿಗೆ ಆಗ್ರಹಿಸಿ ನಿರ್ಣಯ ಅಂಗೀಕಾರ ತಿರುವನಂತಪುರ (ಪಿಟಿಐ): ವನ್ಯಜೀವಿ ಸಂರಕ್ಷಣಾ ಕಾನೂನಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಬುಧವಾರ ಸರ್ವಾನುಮತದಿಂದ ಅಂಗೀಕರಿಸಲಾಯಿತು. ವನ್ಯಜೀವಿ ಸಂರಕ್ಷಣಾ ಕಾನೂನಿನ ಕೆಲವು ನಿಬಂದನೆಗಳು, ನಿಯಮಗಳು ಮತ್ತು ಮಾರ್ಗಸೂಚಿಗಳಿಗೆ ತಿದ್ದುಪಡಿ ತರಬೇಕೆಂದು ಆಗ್ರಹಿಸಿರುವ ನಿರ್ಣಯವನ್ನು ಅರಣ್ಯ ಸಚಿವ ಎ.ಕೆ. ಶಶೀಂದ್ರನ್‌ ಮಂಡಿಸಿದರು. ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿರುವ ಕಾರಣ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಅವರು ತಿಳಿಸಿದರು. ಈ ಕಾನೂನಿಗೆ ಸಂಬಂಧಿಸಿ ಕೆಲವು ಸಲಹೆಗಳನ್ನು ವಿರೋಧ ಪಕ್ಷ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ನ ಶಾಸಕರು ನೀಡಿದರು. ಕೇಂದ್ರ ಸರ್ಕಾರದ ಕಾನೂನಿನಿಂದ ವನ್ಯಜೀವಿಗಳ ನಿಯಂತ್ರಣಕ್ಕೆ ಅಡ್ಡಿಯಾಗುತ್ತಿದೆ. ಕಾಡು ಹಂದಿಯಂತಹ ಪ್ರಾಣಿಗಳು ಜನರಿಗೆ ತೊಂದರೆ ನೀಡುತ್ತಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಮನುಷ್ಯರ ಮೇಲೆ ಪ್ರಾಣಿಗಳು ದಾಳಿ ನಡೆಸಿದಾಗ ಮತ್ತು ಅವುಗಳು ಮಾನವನ ವಾಸಸ್ಥಳಕ್ಕೆ ಬಂದಾಗ ತಕ್ಷಣ ಕ್ರಮ ಕೈಗೊಳ್ಳುವ ಅಧಿಕಾರವನ್ನು ಮುಖ್ಯ ವನ್ಯಜೀವಿ ವಾರ್ಡನ್‌ನಿಂದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ನೀಡಬೇಕೆಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.