ದೆಹಲಿ ಚಲೋ: ರೈತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಸಿಜೆಐಗೆ ಪತ್ರ ನವದೆಹಲಿ: ರೈತ ಸಂಘಟನೆಗಳು ಇಂದು (ಮಂಗಳವಾರ) ಹಮ್ಮಿಕೊಂಡಿರುವ ‘ದೆಹಲಿ ಚಲೋ’ದಿಂದಾಗಿ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆ ಉಂಟಾಗಲಿದ್ದು, ದೆಹಲಿಯನ್ನು ಪ್ರವೇಶಿಸಲು ಯತ್ನಿಸುವ ರೈತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಆದಿಶ್ ಅಗರವಾಲಾ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರಿಗೆ ಪತ್ರ ಬರೆದಿದ್ದಾರೆ. ಜತೆಗೆ, ನ್ಯಾಯಾಲಯಗಳಿಗೆ ವಕೀಲರು ಸೂಕ್ತ ಸಮಯಕ್ಕೆ ಹಾಜರಾಗದ ಕಾರಣ ಯಾವುದೇ ಪ್ರತಿಕೂಲ ಆದೇಶವನ್ನು ಹೊರಡಿಸದಂತೆ ನ್ಯಾಯಾಲಯಗಳಿಗೆ ನಿರ್ದೇಶನಗಳನ್ನು ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ' ' ' : () . … ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುಮಾರು 200 ರೈತ ಸಂಘಟನೆಗಳು ಇಂದು ‘ದೆಹಲಿ ಚಲೋ’ ಹಮ್ಮಿಕೊಂಡಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‌ ಭಾಗಗಳಿಂದ ಭಾರಿ ಸಂಖ್ಯೆಯ ರೈತರು ದೆಹಲಿಯತ್ತ ಧಾವಿಸಲು ಮುಂದಾಗಿದ್ದಾರೆ. ಆದರೆ, ಅವರು ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ತಡೆಯಲು ಸಿಂಘು, ಟಿಕ್ರಿ, ಗಾಜೀಪುರ ಗಡಿಯಲ್ಲಿ ಹಲವು ಹಂತಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ರಸ್ತೆಗಳಿಗೆ ಅಡ್ಡಲಾಗಿ ಮುಳ್ಳು ತಂತಿ, ಮೊಳೆಗಳ ಪಟ್ಟಿ, ಸಿಮೆಂಟ್‌ ಇಟ್ಟಿಗೆ ಮತ್ತು ಕಂಟೈನರ್‌ಗಳನ್ನು ಇಡಲಾಗಿದೆ. ಜೊತೆಗೆ ಬೃಹತ್‌ ಸಂಖ್ಯೆಯ ಪೊಲೀಸ್‌ ಮತ್ತು ಅರೆಸೇನಾಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ‘ಗಡಿಗಳಲ್ಲಿ ಡ್ರೋನ್‌ ಕಣ್ಗಾವಲಿಡಲಾಗಿದೆ. ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ಪೊಲೀಸರು ಸಿದ್ಧರಾಗಿದ್ದಾರೆ’ ಎಂದು ಅಧಿಕಾರಿ ಯೊಬ್ಬರು ತಿಳಿಸಿದರು. ಚಂಡೀಗಢ ಮತ್ತು ಪಂಜಾಬ್‌ನ ಗಡಿಗಳಲ್ಲಿ ವಾಹನಗಳ ಸಂಚಾರಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಸಿಂಘು ಗಡಿಯಲ್ಲಿ ಸೋಮವಾರದಿಂದಲೇ ವಾಣಿಜ್ಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮಂಗಳವಾರದ ನಂತರ ಎಲ್ಲಾ ರೀತಿಯ ವಾಹನಗಳಿಗೆ ನಿರ್ಬಂಧ ಹೇರಲಾಗುತ್ತದೆ ಎಂದು ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ. ಹರಿಯಾಣ ಅಧಿಕಾರಿಗಳು ಅಂಬಾಲಾ, ಜಿಂದ್‌, ಫತೇಹಾಬಾದ್‌ ಮತ್ತು ಕುರುಕ್ಷೇತ್ರದಲ್ಲಿ ಗಡಿಗಳಲ್ಲಿ ಸಿಮೆಂಟ್‌ ಇಟ್ಟಿಗೆ, ಕಬ್ಬಿಣದ ಮೊಳೆಗಳ ಪಟ್ಟಿಗಳನ್ನು ಅಡ್ಡಲಾಗಿ ಇರಿಸುವ ಮೂಲಕ ಮೂಲಕ ನಿರ್ಬಂಧಿಸಿದ್ದಾರೆ. ಅಲ್ಲದೆ ರಾಜ್ಯದ 15 ಜಿಲ್ಲೆಗಳಲ್ಲಿ ಸೆಕ್ಷನ್‌ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್‌, ಜಿಂದ್, ಹಿಸಾರ್‌, ಫತೇಹಾಬಾದ್‌ ಮತ್ತು ಸಿರ್ಸಾದಲ್ಲಿ ಫೆ.13ರವರೆಗೆ ಇಂಟರ್ನೆಟ್‌ ಮತ್ತು ಎಸ್‌ಎಂಎಸ್‌ ಸೇವೆಯನ್ನು ಸ್ಥಗಿತ ಗೊಳಿಸಲಾಗಿದೆ. ಹರಿಯಾಣದ ಗಡಿ ಗ್ರಾಮಗಳ ರಸ್ತೆಗಳನ್ನೂ ಮುಚ್ಚಲಾಗಿದೆ. ದೆಹಲಿ–ರೋಹ್ಟಕ್ ಮತ್ತು ದೆಹಲಿ– ಬಹದೂರ್‌ಗಢ ರಸ್ತೆಗಳಲ್ಲಿ ಅರೆಸೇನಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಚಾರ ದಟ್ಟಣೆ: ದೆಹಲಿಯಲ್ಲಿ ರೈತ ಸಂಘಟನೆಗಳು ‘ದೆಹಲಿ ಚಲೋ’ ಹಮ್ಮಿಕೊಂಡಿರುವುದರಿಂದ ನಗರದ ಹಲವು ಭಾಗಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.