ದೆಹಲಿ ಚಲೋ: ಕೇಂದ್ರ, ಪಂಜಾಬ್, ಹರಿಯಾಣ ಸರ್ಕಾರಗಳಿಗೆ ಹೈಕೋರ್ಟ್‌ ನೋಟಿಸ್ ಚಂಡೀಗಢ: ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ವಿಷಯವಾಗಿ ಸಲ್ಲಿಕೆಯಾದ ಎರಡು ಪ್ರತ್ಯೇಕ ಅರ್ಜಿಗಳಿಗೆ ಸಂಬಂಧಿಸಿದಂತೆ ಹರಿಯಾಣ, ಪಂಜಾಬ್ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಕ್ಕೆ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ನೋಟಿಸ್‌ ನೀಡಿದೆ. ಪ್ರತಿಭಟನೆಯನ್ನು ತಡೆಯಲು ಸರ್ಕಾರಗಳು ಕೈಗೊಂಡಿರುವ ಕಠಿಣ ಕ್ರಮಗಳನ್ನು ನಿಲ್ಲಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿಯೊಂದರಲ್ಲಿ ಮನವಿ ಮಾಡಲಾಗಿತ್ತು. ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆಯದಂತೆ ಮತ್ತು ಹೆದ್ದಾರಿ ತಡೆಯುವವರಿಗೆ ಶಿಕ್ಷೆ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಇನ್ನೊಂದು ಅರ್ಜಿಯಲ್ಲಿ ಕೋರಲಾಗಿತ್ತು. ಹಂಗಾಮಿ ಮುಖ್ಯ ನ್ಯಾಯಾಧೀಶ ಜಿ.ಎಸ್‌.ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಲಪಿತಾ ಬನರ್ಜಿ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸಿತು. ನಂತರ ಫೆ.15ಕ್ಕೆ ವಿಚಾರಣೆಯನ್ನು ಮುಂದೂಡಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.