ಕೇಜ್ರಿವಾಲ್ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದಾರೆ: ಸಚಿವ ಅನುರಾಗ್ ಠಾಕೂರ್ ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ ವ್ಯಕ್ತಿ ಈಗ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ನೀಡಿತ್ತು. ಆದರೆ, ವಿಚಾರಣೆಗೆ ಗೈರಾದ ಕಾರಣ ಇ.ಡಿ ನೀಡಿರುವ ದೂರಿನ ಮೇರೆಗೆ ಫೆಬ್ರುವರಿ 17ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯವು ಆದೇಶಿಸಿದೆ. ‘ಭ್ರಷ್ಟಾಚಾರದ ಆರೋಪಗಳಿಂದ ಕೇಜ್ರಿವಾಲ್‌ ಎಷ್ಟು ದಿನ ತಪ್ಪಿಸಿಕೊಳ್ಳುತ್ತಾರೆ. ಈಗ ಅವರು ನ್ಯಾಯಾಲಯಕ್ಕೆ ಹಾಜರಾಗುವ ಸಮಯ ಬಂದಿದೆ’ ಎಂದು ಠಾಕೂರ್‌ ಹೇಳಿದ್ದಾರೆ. ‘ಕೇಜ್ರಿವಾಲ್‌ ಅವರು ನ್ಯಾಯಾಲಯದಲ್ಲಿ ಸತ್ಯವನ್ನು ಮಾತನಾಡಬೇಕು. ಮಾಧ್ಯಮಗಳ ಗಮನ ಗಿಟ್ಟಿಸುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಬಾರದು’ ಎಂದು ಅವರು ಆಗ್ರಹಿಸಿದ್ದಾರೆ. ‘ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದವರು ಈಗ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದಾರೆ. ಜಾರಿ ನಿರ್ದೇಶನಾಲಯವು ಐದು ಬಾರಿ ನೋಟಿಸ್ ನೀಡಿದರೂ ನಿರ್ಲಕ್ಷಿಸಲಾಗಿದ್ದು, ಈಗ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಆದೇಶಿಸಬೇಕಾಯಿತು’ ಎಂದು ಠಾಕೂರ್ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.