ಯುಸಿಸಿ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅಸ್ತು ಡೆಹ್ರಾಡೂನ್: ಏಕರೂಪ ನಾಗರಿಕ ಸಂಹಿತೆಯ(ಯುಸಿಸಿ) ಅಂತಿಮ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಈ ಮೂಲಕ ನಾಳೆಯಿಂದ ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮಸೂದೆ ಮಂಡನೆ ನಿಶ್ಚಿತವಾಗಿದೆ. ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮುನ್ನ ಸಚಿವ ಸಂಪುಟದ ಅಂಗೀಕಾರ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಅಧಿಕೃತ ನಿವಾಸದಲ್ಲೇ ಭಾನುವಾರ ಸಚಿವ ಸಂಪುಟ ಸಭೆ ನಡೆಯಿತು. ಯುಸಿಸಿ ಕುರಿತಾದ ಮಸೂದೆಯನ್ನು ಮಂಡಿಸಿ ಜಾರಿಗೆ ತರುವ ನಿಟ್ಟಿನಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಸ್ವಾತಂತ್ರ್ಯಾನಂತರ ದೇಶದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ. 2022ರ ವಿಧಾನಸಭೆ ಚುನಾವಣೆಯ ಸಂದರ್ಭ ಧಾಮಿ ನೀಡಿದ್ದ ಭರವಸೆಗಳಲ್ಲಿ ಯುಸಿಸಿ ಜಾರಿಯು ಪ್ರಮುಖವಾಗಿತ್ತು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ 5 ಸದಸ್ಯರ ಆಯೋಗವು ಇತ್ತೀಚೆಗೆ ಯುಸಿಸಿಯ ಅಂತಿಮ ಕರಡು ಮಸೂದೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.