ಸಂದೇಶ್‌ಖಾಲಿಯಲ್ಲಿ ಮತ್ತೆ ಹಿಂಸಾಚಾರ: ಟಿಎಂಸಿ ನಾಯಕರ ಆಸ್ತಿಗಳಿಗೆ ಬೆಂಕಿ ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ಶುಕ್ರವಾರ ಮತ್ತೆ ಹಿಂಸಾಚಾರ ನಡೆದಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಹಾಗೂ ಬಲವಂತವಾಗಿ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ಆಕ್ರೋಶಗೊಂಡ ಸ್ಥಳೀಯರು ಟಿಎಂಸಿ ನಾಯಕರಿಗೆ ಸೇರಿದ ಆಸ್ತಿಗಳಿಗೆ ಬೆಂಕಿ ಇಟ್ಟಿದ್ದಾರೆ. ದೊಣ್ಣೆಗಳನ್ನು ಹಿಡಿದುಕೊಂಡಿದ್ದ ಗುಂಪು, ಸಂದೇಶ್‌ಖಾಲಿಯ ಬೆಳ್ಮಜೂರ್ ಪ್ರದೇಶದ ಮೀನುಗಾರಿಕಾ ಯಾರ್ಡ್‌ ಬಳಿ ಗುಡಿಸಲುಗಳನ್ನು ಸುಟ್ಟು ಹಾಕಿದ್ದಾರೆ. ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಷಹಜಹಾನ್ ಶೇಖ್ ಮತ್ತು ಅವರ ಸಹೋದರ ಸಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಡಲಾದ ಗುಡಿಸಲುಗಳು ಸಿರಾಜ್‌ಗೆ ಸೇರಿದ್ದು ಎಂದು ತಿಳಿದುಬಂದಿದೆ. ‘ಇಲ್ಲಿ ಪೊಲೀಸರು ವರ್ಷಗಳಿಂದ ಏನೂ ಮಾಡುತ್ತಿಲ್ಲ. ಹೀಗಾಗಿ ನಾವು ನಮ್ಮ ಭೂಮಿ ಹಾಗೂ ಗೌರವವನ್ನು ಪಡೆಯಲು ಎಲ್ಲವನ್ನೂ ಮಾಡುತ್ತಿದ್ದೇವೆ’ ಎಂದು ಪ್ರತಿಭಟನಾಕಾರರೊಬ್ಬರು ಹೇಳಿದರು. ಸ್ಥಳಕ್ಕೆ ಪೊಲೀಸರು ಆಗಮಿಸಿ, ಪ್ರತಿಭಟನಾಕಾರರನ್ನು ಶಾಂತವಾಗಿರುವಂತೆ ಕೋರಿದರು. ಆರೋಪಿಗಳಿಗೆ ಶಿಕ್ಷೆ ನೀಡುತ್ತೇವೆ ಎಂದು ಡಿಜಿಪಿ ಭರವಸೆ ನೀಡಿದ ಬೆನ್ನಲ್ಲೇ ಮತ್ತೊಮ್ಮೆ ಹಿಂಸಾಚಾರ ನಡೆದಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.