ಡೋಪಿಂಗ್: ಕುಸ್ತಿ ಆಯ್ಕೆ ಟ್ರಯಲ್ಸ್ ಆಯೋಜಕರಿಗೆ ನೋಟಿಸ್ –ಕ್ರೀಡಾ ಸಚಿವ ನಾರಾಯಣಗೌಡ ಶಿವಮೊಗ್ಗ: ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗಾಗಿ ಹರಿಹರದಲ್ಲಿ ಇತ್ತೀಚೆಗೆ ನಡೆದಿದ್ದ ರಾಜ್ಯ ತಂಡದ ಆಯ್ಕೆ ಟ್ರಯಲ್ಸ್‌ ವೇಳೆ ಡೋಪಿಂಗ್‌ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಯೋಜಕರಿಗೆ ನೋಟಿಸ್ ನೀಡಲಾಗಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದರು. ಸೆ.16ರಂದು ‘ಪ್ರಜಾವಾಣಿ’ಯಲ್ಲಿ ಕುಸ್ತಿ ಆಯ್ಕೆ ಟ್ರಯಲ್ಸ್‌ನಲ್ಲಿ ಡೋಪಿಂಗ್ ಛಾಯೆ ಕುರಿತು ವಿಶೇಷ ವರದಿ ಪ್ರಕಟವಾಗಿತ್ತು. ವಿಧಾನ ಪರಿಷತ್‌ನಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್. ಅರುಣ್ ಅವರು ‘ಪ್ರಜಾವಾಣಿ’ ವರದಿಯ ಕುರಿತು ಪ್ರಸ್ತಾಪಿಸಿದಾಗ ಸಚಿವ ನಾರಾಯಣಗೌಡ ನೋಟಿಸ್‌ ನೀಡಿದ್ದಾಗಿಹೇಳಿದರು. ರಾಜ್ಯದ ಕ್ರೀಡಾ ಸಂಸ್ಥೆಗಳು ಇನ್ನುಮುಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟ ಆಯೋಜಿಸುವಾಗ ಹಾಗೂ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ವೇಳೆ ಕಡ್ಡಾಯವಾಗಿ ಡೋಪಿಂಗ್ ಪರೀಕ್ಷೆಗೆ ಒಳಪಡಿಸುವಂತೆ ಸುತ್ತೋಲೆ ಹೊರಡಿಸಲಾಗುತ್ತಿದೆ. ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬೀಳುವ ಕ್ರೀಡಾಪಟುಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವ ಜೊತೆಗೆ ಇಲಾಖೆಯಿಂದ ಯಾವುದೇ ಸೌಲಭ್ಯ ನೀಡದಂತೆಯೂ ಸೂಚಿಸಲಾಗಿದೆ ಎಂದು ಸಚಿವರು ವಿವರಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.