2024: ನಾಯಕ ಸ್ಥಾನ ತ್ಯಜಿಸಿದ ಧೋನಿ; ಸಿಎಸ್‌ಕೆ ನೂತನ ಕ್ಯಾಪ್ಟನ್ ಗಾಯಕವಾಡ್ ಚೆನ್ನೈ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನವನ್ನು ಮಹೇಂದ್ರ ಸಿಂಗ್ ಧೋನಿ ತ್ಯಜಿಸಿದ್ದಾರೆ. ಅಲ್ಲದೆ ಸಿಎಸ್‌ಕೆ ತಂಡದ ನೂತನ ಕ್ಯಾಪ್ಟನ್ ಆಗಿ ಯುವ ಭರವಸೆಯ ಆಟಗಾರ ಋತುರಾಜ್ ಗಾಯಕವಾಡ್ ಅವರನ್ನು ನೇಮಕ ಮಾಡಲಾಗಿದೆ. ಮಾರ್ಚ್ 22ರಂದು ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ. ಇದಕ್ಕೂ ಒಂದು ದಿನ ಮುಂಚಿತವಾಗಿ ನಾಯಕ ಸ್ಥಾನ ಬಿಟ್ಟುಕೊಡಲು ಧೋನಿ ನಿರ್ಧರಿಸಿದ್ದಾರೆ. ಈ ಕುರಿತು ಸಿಎಸ್‌ಕೆ ತನ್ನ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪ್ರಕಟಿಸಿದೆ. : . # # ಧೋನಿ ನಾಯಕತ್ವದ ಅಡಿಯಲ್ಲಿ ಸಿಎಸ್‌ಕೆ, ಐದು ಬಾರಿ ಐಪಿಎಲ್ ಟ್ರೋಫಿ ಗೆದ್ದಿದೆ. 42 ವರ್ಷದ ಧೋನಿ, ಪ್ರಸಕ್ತ ಸಾಲಿನ ಬಳಿಕ ಐಪಿಎಲ್‌ಗೂ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಯಕತ್ವ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ನಡೆಯಲು ಕ್ಯಾಪ್ಟನ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದೆಡೆ 2020ರಲ್ಲಿ ಚೆನ್ನೈ ಪರ ಪದಾರ್ಪಣೆ ಮಾಡಿರುವ ಋತುರಾಜ್, ಒಟ್ಟು 52 ಪಂದ್ಯಗಳನ್ನು ಆಡಿದ್ದಾರೆ. ಒಂದು ಶತಕವನ್ನು ಗಳಿಸಿದ್ದಾರೆ. ಕಳೆದ ವರ್ಷ 16 ಪಂದ್ಯಗಳಲ್ಲಿ 147.50 ಸ್ಟ್ರೈಕ್‌ರೇಟ್‌ನಲ್ಲಿ 590 ರನ್ ಗಳಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.