ಭಾರತ ಕ್ರಿಕೆಟ್ ತಂಡದ ಶ್ರೀಲಂಕಾ ಪ್ರವಾಸ: T20ಗೆ ಯಾದವ್, ODIಗೆ ಶರ್ಮಾ ನಾಯಕ ನವದೆಹಲಿ: ಬರುವ ಜುಲೈ ಹಾಗೂ ಆಗಸ್ಟ್‌ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಬಾರತ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಸೂರ್ಯಕುಮಾರ್ ಯಾದವ್ T20 ತಂಡವನ್ನು ಮುನ್ನಡೆಸಲಿದ್ದಾರೆ. ಟಿ20 ಪಂದ್ಯಗಳು ಜುಲೈ 26, 27, 29ರಂದು ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಗಸ್ಟ್ 1, 4 ಹಾಗೂ 7ರಂದು ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳಲ್ಲಿ ಬಿಳಿ ಚೆಂಡನ್ನು ಬಳಸುತ್ತಿರುವುದು ವಿಶೇಷ. ಉಭಯ ತಂಡಗಳು ನೂತನ ತರಬೇತುದಾರರನ್ನು ಹೊಂದಿದ್ದು, ಪಂದ್ಯ ಕುತೂಹಲ ಪಡೆದುಕೊಂಡಿದೆ. ಭಾರತ ತಂಡಕ್ಕೆ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕಗೊಂಡ ನಂತರ ಚೊಚ್ಚಲ ಪಂದ್ಯ ಇದಾಗಿದೆ. ಮತ್ತೊಂದೆಡೆ ಶ್ರೀಲಂಕಾ ತಂಡಕ್ಕೆ ಸನತ್ ಜಯಸೂರ್ಯ ಕೋಚ್‌ ಆಗಿ ಇತ್ತೀಚೆಗೆ ನೇಮಕಗೊಂಡಿದ್ದಾರೆ. ಶುಭಮನ್ ಗಿಲ್ ಅವರಿಗೆ ತಂಡದ ಉಪನಾಯಕನ ಪಟ್ಟ ನೀಡಲಾಗಿದೆ. ವಿಜಯ ಹಜಾರೆ ಟ್ರೋಫಿಯಲ್ಲಿ ಏಳು ಬಾರಿ ಅರ್ಧ ಶತಕ ಗಳಿಸಿದ ರಿಯಾನ್ ಪರಾಗ್, ದೆಹಲಿಯ ವೇಗದ ಬೌಲರ್ ಹರ್ಷಿತ್ ರಾಣಾ ಈ ಪ್ರವಾಸದಲ್ಲಿ ಆಡುತ್ತಿರುವ ಹೊಸ ಮುಖಗಳು. ಟಿ20 ತಂಡ ಹೀಗಿದೆ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯಾ, ಶಿವಂ ದುಬೆ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ವಿ ಬಿಷ್ಣೋಯಿ, ಅರ್ಶದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್. ಸ್ಟಾರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು 50 ಓವರ್‌ಗಳ ಪಂದ್ಯದಲ್ಲಿ ಆಡಲಿದ್ದಾರೆ. ಈ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಶಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಐಯ್ಯರ್, ಅರ್ಶದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಸರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ ಇದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.