ಖೇಲ್‌ ರತ್ನಗೆ ವಿನೇಶಾ ನಾಮನಿರ್ದೇಶನ ನವದೆಹಲಿ: ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ), ವಿನೇಶಾ ಪೋಗಟ್‌ ಅವರ ಹೆಸರನ್ನು ಪ್ರತಿಷ್ಠಿತ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲು ನಿರ್ಧರಿಸಿದೆ. ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿರುವ ವಿನೇಶಾ, ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿರುವ ಭಾರತದ ಏಕೈಕ ಮಹಿಳಾ ಕುಸ್ತಿಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಹೋದ ವರ್ಷವೂ ವಿನೇಶಾ ಅವರನ್ನು ಖೇಲ್‌ ರತ್ನ ಗೌರವಕ್ಕೆ ನಾಮನಿರ್ದೇಶನ ಮಾಡಲಾಗಿತ್ತು. ಆದರೆ ಬಜರಂಗ್‌ ಪೂನಿಯಾಗೆ ಪ್ರಶಸ್ತಿ ಒಲಿದಿತ್ತು. ಜಕಾರ್ತದಲ್ಲಿ ನಡೆದಿದ್ದ ಏಷ್ಯನ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿದ್ದ ವಿನೇಶಾ, ಹಿಂದಿನ ಮೂರು ವರ್ಷಗಳಿಂದಲೂ ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ ಅಮೋಘ ಸಾಮರ್ಥ್ಯ ತೋರುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನವದೆಹಲಿಯಲ್ಲಿ ನಡೆದಿದ್ದ ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ ಅವರು ಕಂಚಿನ ಪದಕದ ಸಾಧನೆ ಮಾಡಿದ್ದರು. ‘ಖೇಲ್‌ ರತ್ನ ಪ್ರಶಸ್ತಿಗೆ ವಿನೇಶಾ ಅವರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದೇವೆ. ಈ ಸಂಬಂಧ ನಾಳೆ ಕ್ರೀಡಾ ಸಚಿವಾಲಯಕ್ಕೆ ಅರ್ಜಿ ರವಾನಿಸುತ್ತೇವೆ. ಅರ್ಜುನ ಪ್ರಶಸ್ತಿಗಾಗಿ ಸಾಕಷ್ಟು ಪೈಪೋಟಿ ಇದೆ. ಯಾರ ಹೆಸರನ್ನು ಶಿಫಾರಸು ಮಾಡಬೇಕೆಂಬುದನ್ನು ಅಧ್ಯಕ್ಷರು ನಿರ್ಧರಿಸುತ್ತಾರೆ’ ಎಂದು ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ವಿನೋದ್‌ ತೋಮರ್‌ ನುಡಿದಿದ್ದಾರೆ. ಅರ್ಜುನ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ ಸಾಕ್ಷಿ?: 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಹೊಸ ಮೈಲುಗಲ್ಲು ಸ್ಥಾಪಿಸಿದ್ದ ಸಾಕ್ಷಿ ಮಲಿಕ್‌, ಅರ್ಜುನ ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆಸಾಕ್ಷಿಗೆ 2016ರಲ್ಲಿ ಖೇಲ್‌ ರತ್ನ ಗೌರವ ಒಲಿದಿತ್ತು. ದೀಪಕ್‌ ಪುನಿಯಾ ಹಾಗೂ ರಾಹುಲ್‌ ಅವಾರೆ ಅವರೂ ಅರ್ಜುನ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ. ಈ ಮೂವರ ಪೈಕಿ ಫೆಡರೇಷನ್‌ ಯಾರ ಹೆಸರನ್ನು ಅಂತಿಮಗೊಳಿಸಲಿದೆ ಎಂಬ ಕುತೂಹಲ ಈಗ ಗರಿಗೆದರಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.