ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಗಾಯಾಳು ಶ್ರೇಯಸ್ ಅಲಭ್ಯ: ಫೀಲ್ಡಿಂಗ್ ಕೋಚ್ ಮುಂಬೈ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಬಲಗೈ ಬ್ಯಾಟರ್ ಶ್ರೇಯಸ್ ಅಯ್ಯರ್, ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಿದ್ದಾರೆ. ಈ ವಿಚಾರವನ್ನು ಟೀಮ್ ಇಂಡಿಯಾದ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಖಚಿತಪಡಿಸಿದ್ದಾರೆ. ಗಾಯಮುಕ್ತಗೊಂಡಿದ್ದ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ತಂಡವನ್ನು ಸೇರಿಕೊಂಡಿದ್ದರು. ಆದರೆ ಬೆನ್ನು ನೋವು ಮತ್ತೆ ಉಲ್ಬಣಿಸಿದ್ದರ ಪರಿಣಾಮ ಅಹಮದಾಬಾದ್‌ನಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿರಲಿಲ್ಲ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ಶಿಬಿರ ಸೇರಿಕೊಂಡಿರುವ ಅಯ್ಯರ್‌ಗೆ ಜಸ್‌ಪ್ರೀತ್ ಬೂಮ್ರಾ ಹಾಗೂ ಪ್ರಸಿದ್ಧ ಕೃಷ್ಣ ಅವರಿಗೆ ಸಮಾನವಾದ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೇ ಎಂಬುದು ತಿಳಿದು ಬಂದಿಲ್ಲ. ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಟೂರ್ನಿಯ ಮೊದಲಾರ್ಧದಲ್ಲಿ ಅಯ್ಯರ್ ಆಡುವುದು ಅನುಮಾನವೆನಿಸಿದೆ. ಇದರಿಂದಾಗಿ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಬದಲಿ ಕಪ್ತಾನರನ್ನು ಹುಡುಕುವ ಸವಾಲು ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ 2-1ರ ಅಂತರದ ಗೆಲುವು ದಾಖಲಿಸಿತ್ತು. ಈಗ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಶುಕ್ರವಾರ ಮುಂಬೈಯಲ್ಲಿ ನಡೆಯಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.