ಅಸ್ಥಿರಜ್ಜು ಚಿಕಿತ್ಸೆ | ಪಂತ್‌ರನ್ನು ಮುಂಬೈಗೆ ಸ್ಥಳಾಂತರ ಮಾಡಲಾಗುವುದು: ಬಿಸಿಸಿಐ ನವದೆಹಲಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಡೆಹ್ರಾಡೂನ್ ಆಸ್ಪತ್ರೆಯಿಂದ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳು ತಿಳಿಸಿವೆ. ಪಂತ್ ಅವರು ಮುಂಬೈಯಲ್ಲಿ ಮೊಣಕಾಲು ಮತ್ತು ಬಲಗಾಲಿನ ಮಂಡಿಯ ಲಿಗಮೆಂಟ್‌ (ಅಸ್ಥಿರಜ್ಜು) ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ಸಲಹೆಗಾರ ಮತ್ತು ಹಿರಿಯ ಮೂಳೆ ಶಸ್ತ್ರಚಿಕಿತ್ಸಕ ಡಾ.ದಿನ್ಶಾ ಪರ್ದಿವಾಲಾ ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಅಗತ್ಯತೆ ಕಂಡುಬಂದರೆ ಬ್ರಿಟನ್ ಅಥವಾ ಅಮೆರಿಕದಲ್ಲಿರುವ ತಜ್ಞರ ಸಲಹೆಯನ್ನು ಪಡೆಯಲಾಗುವುದು ಎಂದು ಪರ್ದಿವಾಲಾ ಹೇಳಿದ್ದಾರೆ. 2022 ಡಿಸೆಂಬರ್ 30ರಂದು ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ 25 ವರ್ಷದ ಪಂತ್ ಗಾಯಗೊಂಡಿದ್ದರು. ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು. ತಲೆ, ಬೆನ್ನು, ಮಂಡಿ, ಕಾಲಿಗೆ ಗಾಯಗಳಾಗಿದ್ದವು. ಅಪಘಾತದಲ್ಲಿ ಕಾರು ಸುಟ್ಟು ಹೋಗಿದ್ದರೂ, ಪಂತ್‌ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ರಸ್ತೆ ಗುಂಡಿ ತಪ್ಪಿಸಲು ಹೋಗಿ ಕ್ರಿಕೆಟಿಗ ರಿಷಭ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದರು. ಇವನ್ನೂ ಓದಿ: ಪಂತ್ ಆರೋಗ್ಯದಲ್ಲಿ ಚೇತರಿಕೆ ಕಾರು ಅಪಘಾತದಲ್ಲಿ ಗಾಯಗೊಂಡ ರಿಷಭ್ ಪಂತ್‌ಗೆ ಪ್ಲಾಸ್ಟಿಕ್ ಸರ್ಜರಿ ಅಪಘಾತ: ಕ್ರಿಕೆಟಿಗ ಪಂತ್ ತಾಯಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ ಅಪಘಾತದ ವೇಳೆ ಪಂತ್‌ರನ್ನು ರಕ್ಷಿಸಿದ ಬಸ್‌ ಚಾಲಕ, ನಿರ್ವಾಹಕರಿಗೆ ಸನ್ಮಾನ | ರಿಷಭ್‌ ಪಂತ್‌ ಕಾರು ಅಪಘಾತದ ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ! ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.