ಯಜುವೇಂದ್ರ ಚಾಹಲ್‌ ವಿರುದ್ಧ ಜಾತಿ ನಿಂದನೆ: ಯುವರಾಜ್ ಸಿಂಗ್ ಬಂಧನ, ಬಿಡುಗಡೆ ಹಿಸಾರ್‌: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹೈಕೋರ್ಟ್‌ ಆದೇಶದ ಮೇರೆಗೆ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಹೋದ ವರ್ಷ ಇನ್‌ಸ್ಟಾಗ್ರಾಂ ಸಂವಾದವೊಂದರಲ್ಲಿ ಯುವರಾಜ್, ಕ್ರಿಕೆಟಿಗ ಯಜುವೇಂದ್ರ ಚಾಹಲ್ ಅವರಿಗೆ ಜಾತಿ ಹೆಸರಲ್ಲಿ ನಿಂದಿಸಿರುವ ಆರೋಪ ಎದುರಿಸುತ್ತಿದ್ದಾರೆ. 'ಯುವರಾಜ್ ಅವರನ್ನು ಔಪಚಾರಿಕವಾಗಿ ಬಂಧಿಸಲಾಗಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಗಳ ಅನುಸಾರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು' ಎಂದು ಹನ್ಸಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿತಿಕಾ ಗಹ್ಲೌತ್ ಹೇಳಿದ್ದಾರೆ. ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡಸಂಹಿತೆಯ ವಿವಿಧ ಕಲಂಗಳನ್ನು ಉಲ್ಲೇಖಿಸಿ ಹನ್ಸಿ ಠಾಣೆಯಲ್ಲಿ ರಜತ್ ಎಂಬುವವರು ದೂರು ನೀಡಿದ್ದರು. ಅದರ ಪ್ರಕಾರ ಯುವರಾಜ್‌ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.