2022 | ಡೆಲ್ಲಿ–ಮುಂಬೈ ಸೆಣಸು: ನನಸಾಗುವುದೇ ಆರ್‌ಸಿಬಿ ಕನಸು? ಮುಂಬೈ: ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್‌ ಹಂತಕ್ಕೇರುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ತಂಡದ ಭವಿಷ್ಯ ಶನಿವಾರ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ನಿರ್ಧಾರವಾಗಲಿದೆ. ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯ ರಿಷಭ್‌ ಪಂತ್ ನೇತೃತ್ವದ ಡೆಲ್ಲಿ ಪಾಲಿಗೆ‘ಕ್ವಾರ್ಟರ್ ಫೈನಲ್’ ಆಗಿದ್ದು ಗೆದ್ದರೆ ಪ್ಲೇ ಆಫ್‌ಗೆ ಪ್ರವೇಶಿಸಲಿದೆ. ಮುಂಬೈ ಇಂಡಿಯನ್ಸ್‌ ಗೆಲುವಿನೊಂದಿಗೆ ಅಭಿಯಾನ ಮುಕ್ತಾಯಗೊಳಿಸಲು ಪ್ರಯತ್ನಿಸಲಿದೆ. ಆರ್‌ಸಿಬಿ ತನ್ನ ಪಾಲಿನ ಎಲ್ಲ ಪಂದ್ಯಗಳನ್ನು ಮುಗಿಸಿದ್ದು 16 ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಶನಿವಾರ ಗೆದ್ದರೆ ಡೆಲ್ಲಿ ಖಾತೆಗೂ 16 ಪಾಯಿಂಟ್‌ಗಳು ಸೇರಲಿವೆ. ಆದರೆ ಡೆಲ್ಲಿಯ ರನ್‌ರೇಟ್ (+0.255) ಉತ್ತಮವಾಗಿದ್ದು ಬೆಂಗಳೂರನ್ನು (-0.253) ಹಿಂದಿಕ್ಕಿ ಪ್ಲೇ ಆಫ್‌ಗೆ ಪ್ರವೇಶಿಸಲಿದೆ. ಗುರುವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್‌ಗಳಿಂದ ಜಯ ಗಳಿಸಿತ್ತು. ಅರ್ಜುನ್‌ಗೆ ಸಿಗುವುದೇ ಅವಕಾಶ? ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್‌ಗೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೊನೆಗೂ ಅವಕಾಶ ಸಿಗುವುದೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಎರಡು ಆವೃತ್ತಿಗಳಲ್ಲಿ ಅರ್ಜುನ್ ಸತತ 27 ಪಂದ್ಯಗಳಲ್ಲಿ ಬೆಂಚು ಕಾದಿದ್ದಾರೆ. ಕೊನೆಯ ಪಂದ್ಯದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡುವುದಾಗಿ ನಾಯಕ ರೋಹಿತ್ ಶರ್ಮಾ ಹೇಳಿರುವುದರಿಂದ ಅರ್ಜುನ್ ಕಣಕ್ಕೆ ಇಳಿಯುವ ನಿರೀಕ್ಷೆ ಮೂಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.