2021: ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣು! ನವದೆಹಲಿ:ಇಂಡಿಯನ್ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಭಾನುವಾರದಿಂದ ಆರಂಭವಾಗಲಿವೆ. ಇದರಂತೆ ಎಲ್ಲರ ಕಣ್ಣು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ. ಸೆಪ್ಟೆಂಬರ್ 20ರಂದು ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡವು ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸಲಿದೆ. ಇದನ್ನೂ ಓದಿ:ನಾಯಕತ್ವದಿಂದ ನಿರ್ಗಮಿಸಲು ಕೊಹ್ಲಿ ನಿರ್ಧಾರ: ಟಿ20 ಸಾರಥ್ಯ ರೋಹಿತ್ ಶರ್ಮಾಗೆ? ಮುಂಬರುವ ಟ್ವೆಂಟಿ-20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕತ್ವವನ್ನು ತೊರೆಯುವುದಾಗಿ ಪ್ರಕಟಿಸಿರುವ ವಿರಾಟ್ ಕೊಹ್ಲಿ, ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರಿಸುವ ಇರಾದೆಯಲ್ಲಿದ್ದಾರೆ. ಐಪಿಎಲ್‌ನಲ್ಲಿ ಚೊಚ್ಚಲ ಪ್ರಶಸ್ತಿಯ ಹುಡುಕಾಟದಲ್ಲಿರುವ ಆರ್‌ಸಿಬಿ ತಂಡವನ್ನು ಪ್ರಸಕ್ತ ಸಾಲಿನಲ್ಲಿ ಗೆಲುವಿನತ್ತ ಮುನ್ನಡೆಸುವುದು ವಿರಾಟ್ ಗುರಿಯಾಗಿದೆ. ಈ ಮೂಲಕ ತಮ್ಮ ವಿರುದ್ಧ ಎದ್ದಿರುವ ಟೀಕೆಗಳಿಗೆ ತಕ್ಕ ಉತ್ತರ ನೀಡಲು ಸಾಧ್ಯವಾಗಲಿದೆ. ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ ಆಡಿರುವ ಏಳು ಪಂದ್ಯಗಳಲ್ಲಿ ಐದು ಗೆಲುವಿನೊಂದಿಗೆ ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಕೊಹ್ಲಿ ನಾಯಕತ್ವ ತೊರೆಯಲು ಅನೇಕ ಅಂಶಗಳು ಒತ್ತಡ ಬೀರಿರಬಹುದು ಎಂದು ಕ್ರಿಕೆಟ್ ಪಂಡಿತರು ಅಂದಾಜಿಸಿದ್ದಾರೆ. ಇದುವರೆಗೆ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ಸಫಲವಾಗಿಲ್ಲ. ಅಲ್ಲದೆ ಆರ್‌ಸಿಬಿ ತಂಡವನ್ನು ಒಂದೇ ಒಂದು ಬಾರಿ ವಿಜಯದತ್ತ ಮುನ್ನಡೆಸಲು ಸಾಧ್ಯವಾಗಲಿಲ್ಲ ಎಂಬುದು ಕೂಡಾ ಗಮನಾರ್ಹವೆನಿಸುತ್ತದೆ. ಐಪಿಎಲ್‌ನಲ್ಲಿ ಯಶಸ್ವಿ ನಾಯಕರೆನಿಸಿಕೊಂಡಿರುವ ರೋಹಿತ್ ಶರ್ಮಾ ಅವರನ್ನು ಟಿ20 ನಾಯಕರಾಗಿ ಘೋಷಿಸುವ ಸಾಧ್ಯತೆಯಿದೆ. ವಿರಾಟ್ ಕೊಹ್ಲಿ ಐಪಿಎಲ್ 2021ರಲ್ಲಿ ಇದುವರೆಗೆ ಆಡಿರುವ ಏಳು ಪಂದ್ಯಗಳಲ್ಲಿ 198 ರನ್ ಗಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.