ಕೃತ್ಯಕ್ಕೆ ಕಡಿವಾಣ ಹಾಕಲು ಮತ್ತೊಂದು ಅತ್ಯಾಚಾರ ನಡೆಯುವವರೆಗೆ ಕಾಯಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌
ನವದೆಹಲಿ: ಕೋಲ್ಕತಾದಲ್ಲಿ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ  ಪ್ರಕರಣದ ವಿಚಾರಣೆ ಮಂಗಳವಾರ ಸುಪ್ರೀಂಕೋರ್ಟ್‌ ನಡೆಸಿದ್ದು, ಇಂತಹ ಕೃತ್ಯಕ್ಕೆ ಕಡಿವಾಣ ಹಾಕಲು ಮತ್ತೊಂದು ಅತ್ಯಾಚಾರ ನಡೆಯುವವರೆಗೆ ಕಾಯಲು ಸಾಧ್ಯವಿಲ್ಲ ಎಂದು ಖಡಕ್‌ ಆಗಿ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿ ಎಫ್‌ಐಆರ್‌ ದಾಖಲು ಮತ್ತು ಇತರ ಪ್ರಕ್ರಿಯೆ ನಡೆಸುವಲ್ಲಿ ಪೊಲೀಸ್‌ ಇಲಾಖೆ, ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಉತ್ತರವಾಗಿ, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಆಸ್ಪತ್ರೆಯಲ್ಲಿ ಜನರು ಫೋಟೋಗಳನ್ನು ತೆಗೆದು ಕೊಂಡಿದ್ದಾರೆ. ಅಸಹಜ ಸಾವಿನ ಪ್ರಕರಣವನ್ನು ತಕ್ಷಣವೇ ಪ್ರಾರಂಭಿಸಲಾಯಿತು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಇರುವ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದು ಪ್ರತಿವಾದಿಸಿದರು.
ವಿಶೇಷವಾಗಿ ಸಂತ್ರಸ್ತೆಯ ಪೋಷಕರ ಅನುಪಸ್ಥಿತಿಯಲ್ಲಿ ಎಫ್‌ಐಆರ್ ದಾಖಲಿಸುವುದು ಆಸ್ಪತ್ರೆಯ ಕರ್ತವ್ಯ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.
ಇನ್ನು ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.