ಮಧ್ಯಪ್ರದೇಶ, ಜಾರ್ಖಂಡ್‌ನಲ್ಲಿ ಚುನಾವಣಾ ರ‍್ಯಾಲಿಗೆ ರಾಹುಲ್ ಗೈರು
ನವದೆಹಲಿ:ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಆಯೋಜಿಸಿರುವ ಕಾಂಗ್ರೆಸ್‌ನ ಚುನಾವಣಾ ರ‍್ಯಾಲಿಯಲ್ಲಿ ನಾಯಕ, ಸಂಸದ ರಾಹುಲ್‌ ಗಾಂಧಿ ಅನಾರೋಗ್ಯದ ಕಾರಣದಿಂದ ಭಾಗವಹಿಸುತ್ತಿಲ್ಲ ಎಂದು ಹಿರಿಯ ಮುಖಂಡ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.
ವಿಪಕ್ಷದ ʼಇಂಡಿಯಾʼ ಒಕ್ಕೂಟಕ್ಕೆ ಬಲ ತುಂಬಲು ಭಾನುವಾರ ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್‌ನ ರಾಂಚಿಯಲ್ಲಿ ಬೃಹತ್‌ ರ‍್ಯಾಲಿ ಆಯೋಜಿಸಲಾಗಿದೆ.
ʼʼರಾಹುಲ್‌ ಗಾಂಧಿ ಅವರಿಗೆ ಅನಾರೋಗ್ಯ ಎದುರಾಗಿದೆ. ಹೀಗಾಗಿ ಅವರು ಮನೆಯಿಂದ ಎಲ್ಲೂ ಹೊರಗೆ ಹೋಗಿಲ್ಲ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ನಾ ಮತ್ತು ರಾಂಚಿಯಲ್ಲಿ ನಡೆಯುವ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆʼʼ ಎಂದು ಜೈರಾಮ್‌ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.
ರಾಂಚಿಯಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ಸಮಾಜವಾದಿ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪತ್ನಿ ಸುನೀತಾ ಮತ್ತು ಕಲ್ಪನಾ ಸೊರೆನ್ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ.