ಸೆಂಥಿಲ್ ಬಾಲಾಜಿ ವಜಾ ಆದೇಶ ವಾಪಸ್
ಚೆನ್ನೈ:ಜೈಲಿನಲ್ಲಿರುವ ಡಿಎಂಕೆ ನಾಯಕ ಹಾಗೂ ರಾಜ್ಯ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಆದೇಶ ಹಿಂಪಡೆಯಲು ತಮಿಳು ನಾಡು ರಾಜ್ಯಪಾಲ ಆರ್ ಎನ್ ರವಿ ನಿರ್ಧರಿಸಿದ್ದಾರೆ.
ಸೆಂಥಿಲ್ ಬಾಲಾಜಿ ಅವರ ವಿಚಾರವಾಗಿ ತಮಿಳುನಾಡು ರಾಜ್ಯಪಾಲರು ಅಟಾರ್ನಿ ಜನರಲ್‌ನಿಂದ ಕಾನೂನು ಅಭಿಪ್ರಾಯ ಪಡೆಯಲು ನಿರ್ಧರಿಸಿದ್ದಾರೆ.
ಕಾನೂನು ಅಭಿಪ್ರಾಯ ಬರುವವರೆಗೆ ರಾಜಭವನದ ಹಿಂದಿನ ಆದೇಶವನ್ನು ಅಮಾನತು ಗೊಳಿಸಲಾಗಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಜಾರಿ ನಿರ್ದೇಶನಾಲಯ (ಇಡಿ) ದಿಂದ ಬಂಧನಕ್ಕೊಳಗಾದ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣ ಮತ್ತು ಅಕ್ರಮ ಹಣ ವರ್ಗಾ ವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಸಚಿವರನ್ನು ವಜಾ ಮಾಡುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ, ನಾವು ಅದನ್ನು ಕಾನೂನುಬದ್ಧವಾಗಿ ಎದುರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. - 
ಉದ್ಯೋಗಕ್ಕಾಗಿ ಲಂಚ ಪಡೆದ ಪ್ರಕರಣ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜೂನ್ 14 ರಂದು ಜಾರಿ ನಿರ್ದೇಶನಾಲಯವು ವಿದ್ಯುತ್, ಅಬಕಾರಿ ಖಾತೆಯನ್ನು ಹೊಂದಿದ್ದ ಸೆಂಥಿಲ್‌ ಬಾಲಾಜಿ ಅವರನ್ನು ಬಂಧಿಸಿತ್ತು. ನಂತರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.