ಪವನ್‌ ಖೇರಾಗೆ ಮಧ್ಯಂತರ ಜಾಮೀನು ಮಾರ್ಚ್‌ 3ರವರೆಗೆ ವಿಸ್ತರಣೆ
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿತ ರಾಗಿದ್ದ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಅವರಿಗೆ ನೀಡಿರುವ ಮಧ್ಯಂತರ ಜಾಮೀನನ್ನು ಮಾರ್ಚ್‌ 3ರವರೆಗೆ ವಿಸ್ತರಿಸಿರುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.
ಖೇರಾ ಅವರನ್ನು ಅಸ್ಸಾಂ ಪೊಲೀಸರು ಕಳೆದ ವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಬಂಧನ ಕುರಿತು ಅಸ್ಸಾಂ ಪೊಲೀಸರ ಹೇಳಿಕೆಯನ್ನು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಮುಖ್ಯ ನ್ಯಾಯ ಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಸಲ್ಲಿಸಿದರು.
ಇದೇ ವೇಳೆ, ಉತ್ತರ ಪ್ರದೇಶ ಸರ್ಕಾರದ ಪರವಾಗಿ ಕೋ‌ರ್ಟ್‌ಗೆ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಗರಿಮಾ ಪ್ರಸಾದ್‌ ಅವರು ಕೂಡ ಈ ವಿಚಾರವಾಗಿ ಹೇಳಿಕೆಯನ್ನು ಸಲ್ಲಿಸಿದರು.
ಬಳಿಕ ಖೇರಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾರ್ಚ್‌ 3ಕ್ಕೆ ನಿಗದಿಪಡಿಸಿತು. ಅಲ್ಲಿಯವರೆಗೆ ಖೇರಾ ಅವರಿಗೆ ನೀಡಲಾಗಿರುವ ಮಧ್ಯಂತರ ಜಾಮೀನು ಜಾರಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸಿತು.