ಪಟಾಕಿ ಸಿಡಿದರೆ ₹ 200 ದಂಡ, 6 ತಿಂಗಳ ಜೈಲು ಶಿಕ್ಷೆ..!
ನವದೆಹಲಿ: ರಾಜಧಾನಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ದೆಹಲಿ ಸರ್ಕಾರ ನಿಷೇಧಿಸಿದೆ.
ದೆಹಲಿಯಲ್ಲಿ ದೀಪಾವಳಿ ಸಂದರ್ಭ ಪಟಾಕಿ ಸಿಡಿದರೆ, ₹ 200 ದಂಡ ಹಾಗೂ 6 ತಿಂಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು’ ಎಂದು ಪರಿಸರ ಸಚಿವ ಗೋಪಾಲ್‌ ರಾಯ್ ಹೇಳಿದ್ದಾರೆ.
‘ದೆಹಲಿಯಲ್ಲಿ ಪಟಾಕಿಗಳ ಉತ್ಪಾದನೆ, ಸಂಗ್ರಹ ಹಾಗೂ ಮಾರಾಟ ಮಾಡಿದವರಿಗೆ ಸ್ಫೋಟಕಗಳ ಕಾಯ್ದೆಯನ್ವಯ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ₹ 5 ಸಾವಿರ ವರೆಗೆ ದಂಡ ವಿಧಿಸಲು ಅವಕಾಶ ಇದೆ’ ಎಂದು ಹೇಳಿದರು.
‘ದಿಯೆ ಜಲಾವೋ, ಪಟಾಖೆ ನಹಿ’ (ದೀಪಗಳನ್ನು ಬೆಳಗಿಸಿ, ಪಟಾಕಿಗಳನ್ನಲ್ಲ) ಎಂಬ ಧ್ಯೇಯವಾಕ್ಯದೊಂದಿಗೆ ಜನಜಾಗೃತಿ ಕಾರ್ಯಕ್ರಮಕ್ಕೆ ಅ. 21ರಂದು ಚಾಲನೆ ನೀಡಲಾ ಗುವುದು’ ಎಂದರು.
‘ಪಟಾಕಿ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಸಹಾಯಕ ಪೊಲೀಸ್‌ ಕಮಿಷನರ್‌ಗಳ ವ್ಯಾಪ್ತಿ ಯಲ್ಲಿ 210 ತಂಡಗಳನ್ನು ಮತ್ತು ಕಂದಾಯ ಇಲಾಖೆಯಿಂದ 165 ಮತ್ತು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯಿಂದ 33 ತಂಡಗಳನ್ನು ರಚಿಸಲಾಗಿದೆ ಎಂದು ವಿವರಿಸಿದರು.
ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿ 188 ಪ್ರಕರಣಗಳನ್ನು ದಾಖಲಿಸಲಾಗಿದ್ದು, 2,917 ಕೆ.ಜಿಯಷ್ಟು ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ ಎಂದೂ ಹೇಳಿದರು.