ಆಶಿಶ್ ಮಿಶ್ರಾ ಜಾಮೀನು ಅರ್ಜಿ ತಿರಸ್ಕೃತ
ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ಜುಲೈ 15ರಂದು ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ ಕೃಷ್ಣ ಪಹಲ್ ಅವರಿದ್ದ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತ್ತು.
ಲಖನೌ ಪೀಠ 2022ರ ಫೆಬ್ರುವರಿ 10ರಂದು ಆಶಿಶ್ ಮಿಶ್ರಾಗೆ ಜಾಮೀನು ನೀಡಿತ್ತು. ಇದನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಸಂತ್ರಸ್ತರಿಗೆ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಿ ಕೊಟ್ಟ ಬಳಿಕ ಜಾಮೀನು ಅರ್ಜಿಯ ಕುರಿತು ತೀರ್ಮಾನ ಕೈಗೊಳ್ಳುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಿತ್ತು. ಹೀಗಾಗಿ, ಹೈಕೋರ್ಟ್ ಹೊಸದಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.
ಕಳೆದ ವರ್ಷ ಅಕ್ಟೋಬರ್ 3ರಂದು ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಮತ್ತು ಓರ್ವ ಪತ್ರಕರ್ತನನ್ನು ವಾಹನ ಹರಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಆರೋಪಿಯಾಗಿದ್ದಾರೆ.