ವಿನಯ್ ಕುಮಾರ್ ಸಕ್ಸೇನಾ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ವೈಯಕ್ತಿಕ ಕಾರಣ ನೀಡಿ ಅನಿಲ್ ಬೈಜಾಲ್ ಮೇ.18 ರಂದು ಲೆಫ್ಟಿನೆಂಟ್‌ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷ ಹುದ್ದೆ ಹೊಂದಿದ್ದ ಸಕ್ಸೇನಾ ಅವರನ್ನು ಮೇ 23 ರಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿತ್ತು.
ಇದರಂತೆ ಗುರುವಾರ  ವಿನಯ್ ಕುಮಾರ್ ಸಕ್ಸೇನಾ ಪ್ರಮಾಣ ವಚನ ಸ್ವೀಕರಿಸಿದ್ದು, ಸಕ್ಸೇನಾ ಅವರಿಗೆ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಅವರು ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು, ಕೇಂದ್ರ ಸಚಿವ ಗಿರಿರಾಜ್ ಸಿಂಗ್, ದೆಹಲಿ ಸಂಸದರು ಮತ್ತು ಶಾಸಕರು ಮತ್ತು ಸರ್ಕಾರದ ಉನ್ನತ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
