ಪಂಜಾಬಿ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು
ಕೆಂಪುಕೋಟೆ ಹಿಂಸಾಚಾರ ಪ್ರಕರಣದ ಆರೋಪಿ
ಸೋನಿಪತ್:ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದ್ದ ಪಂಜಾಬಿ ನಟ ದೀಪ್ ಸಿಧು (37)ಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದ ದೀಪ್ ಸಿಧು ರೈತ ಹೋರಾಟದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ರೈತರ ಪ್ರತಿಭಟನೆ ವೇಳೆ 2021ರ ಕೆಂಪುಕೋಟೆ ಹಿಂಸಾಚಾರ ಪ್ರಕರಣದಲ್ಲಿ ಸಿಧು ಅವರನ್ನು ಈ ಹಿಂದೆ ಆರೋಪಿ ಎಂದು ಹೆಸರಿಸ ಲಾಗಿತ್ತು.
ಕೇಂದ್ರ ಸರ್ಕಾರದ 3 ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಗಣರಾಜ್ಯೋತ್ಸವ ದಿನದಂದು ಆಯೋಜಿಸಿದ್ದ ಟ್ರ್ಯಾಕ್ಟರ್ ರ್ಯಾಲಿ ವೇಳೆಯಲ್ಲಿ ನಡೆದ ಹಿಂಸಾಚಾರ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಫೆ.9 ರಂದು ಸಿಧುವನ್ನು ಬಂಧಿಸಲಾಗಿತ್ತು. ದೀಪ್ ಸಿಧು ಅಪಘಾತದಲ್ಲಿ ಮೃತಪಟ್ಟಿದ್ದಕ್ಕೆ ಪಂಜಾಬ್ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಚನ್ನಿ ಸಂತಾಪ ವ್ಯಕ್ತಪಡಿಸಿದ್ದಾರೆ.