ಗಡಿ ನಿರ್ಣಯ ಪಕ್ಕಾ, ಚುನಾವಣೆ ಬಳಿಕ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್‌ ಶಾ
ಶ್ರೀನಗರ:ಜಮ್ಮು ಕಾಶ್ಮೀರಕ್ಕೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಡಿ ನಿರ್ಣಯ ಹಾಗೂ ವಿಧಾನಸಭಾ ಚುನಾವಣೆ ಬಳಿಕ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಪುನರ್ ಸ್ಥಾಪಿಸ ಲಾಗುವುದು ಎಂದು ಹೇಳಿದ್ದಾರೆ.
370ನೇ ವಿಧಿ ತೆಗೆದು ಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಶ್ರೀನಗರದ ಯುವ ಸಂಘಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಗಡಿ ನಿರ್ಣಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಗಡಿ ನಿರ್ಣಯ ಆಗಿಯೇ ತೀರುತ್ತದೆ. ಆದರೆ ಚುನಾವಣೆ ಬಳಿಕ ಕಾಶ್ಮೀರದ ರಾಜ್ಯ ಸ್ಥಾನಮಾನ ವನ್ನೂ ಪುನರ್ ಸ್ಥಾಪಿಸಲಾಗುವುದು. ಇದರಿಂದಾಗಿ ರಾಜ್ಯದ ಯುವ ಪೀಳಿಗೆಗೆ ಉದ್ಯೋಗಾವಕಾಶಗಳು ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟರು.
ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಯಾರಿಂದಲೂ ತಡೆಗಟ್ಟಲು ಸಾಧ್ಯವಿಲ್ಲ. ರಾಜ್ಯದಲ್ಲಿ ಶಾಂತಿ ಕದಡಲು ಯಾರಾದರೂ ಯತ್ನಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದರು.