ಕಳ್ಳಬಟ್ಟಿ ಸೇವಿಸಿ ಐವರ ಸಾವು, 16 ಮಂದಿ ಅಸ್ವಸ್ಥ
ಬುಲಂದ್‌ಶಹರ್‌:ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯ ಜೀತ್‌ಗಾಲಿ ಗ್ರಾಮದಲ್ಲಿ ಕಳ್ಳಬಟ್ಟಿ ಸೇವಿಸಿ ಐವರು ಸಾವನ್ನ ಪ್ಪಿ, 16 ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಲವರ ಸ್ಥಿತಿ ಗಂಭೀರವಾಗಿದ್ದು, ಮೃತರ ಸಂಖ್ಯೆ ಏರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕಳ್ಳಬಟ್ಟಿ ದಂಧೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಕುಲದೀಪ್‌ ಎಂಬುವನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಎಸ್‌ಎಸ್‌ಪಿ ಸಂತೋಷ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ.
ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇರೆಗೆ ನಾಲ್ವರು ಪೊಲೀಸರನ್ನು ಸರಕಾರ ಅಮಾನತುಗೊಳಿಸಿದೆ. ಅಕ್ರಮ ಮದ್ಯ ಮಾರಾಟ ದಂಧೆ ನಡೆಸುತ್ತಿರುವವರನ್ನು ಬಂಧಿಸಿ ರಾಷ್ಟ್ರೀಯ ಭದ್ರತಾ ಕಾಯದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.