ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ನೋಟಿಸ್‌
ನವದೆಹಲಿ:ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ಬಿಎಸ್‌ಪಿಯ ಆರು ಶಾಸಕರು ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ.
ನ್ಯಾಯಮೂರ್ತಿ ಎಸ್‌.ಅಬ್ದುಲ್ ನಜೀರ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ಪೀಠ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, ಪಕ್ಷಾಂತರಗೊಂಡಿದ್ದ ಎಲ್ಲ ಆರು ಶಾಸಕರಿಗೂ ನೋಟಿಸ್ ನೀಡಿತು.
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಈ ಕುರಿತು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ದ್ದರು. ಆರು ಶಾಸಕರ ಪಕ್ಷಾಂತರದಿಂದಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ವೃದ್ಧಿಯಾಗಿದ್ದು, ಅಶೋಕ್‌ ಗೆಹ್ಲೋಟ್ ನೇತೃತ್ವದ ಸರ್ಕಾರದ ಸ್ಥಾನವನ್ನು ಇನ್ನಷ್ಟು ಬಲಪಡಿಸಿತ್ತು.