ಕಾಸರಗೋಡು-ಮಂಗಳೂರು ನಡುವೆ ಬಸ್‌ಗಳ ಸಂಚಾರಕ್ಕೆ ಒಂದು ವಾರ ನಿರ್ಬಂಧ
ಮಂಗಳೂರು:ಕೇರಳದಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು‌, ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಸರಕಾರಿ ಮತ್ತು ಎಲ್ಲ ಖಾಸಗಿ ಬಸ್‌ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಶನಿವಾರ ಆದೇಶ ಹೊರಡಿಸಿ ದ್ದಾರೆ.
ಆ. 1ರಿಂದ 7ರವರೆಗೆ ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾಸರಗೋಡಿನಿಂದ ದ.ಕ. ಜಿಲ್ಲೆಗೆ ದಿನಂಪ್ರತಿ ಪ್ರಯಾಣಿಸುವವರು, ಕಾಲೇಜು ವಿದ್ಯಾರ್ಥಿ ಗಳು ಕೋವಿಡ್ ಲಸಿಕೆ ಪಡೆದಿದ್ದರೂ (2 ಡೋಸ್ ಆಗಿದ್ದರೂ) 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯ ಆಧಾರದಲ್ಲಿ ಏಳು ದಿನಗಳ ಅವಧಿಗೆ ಅನುಮತಿಸಲಾಗುವುದು ಎಂದು ತಿಳಿಸಿದ್ದಾರೆ.
ವೈದ್ಯಕೀಯ ತುರ್ತು ಸೇವೆ, ಆಯಂಬುಲೆನ್ಸ್ ಹಾಗೂ ಅಂತರ್ ರಾಜ್ಯ ಸರಕು ಸಾಮಗ್ರಿಗಳ ಸಾಗಾಟಕ್ಕೆ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
