ಬೀದರ್‌ ಲೋಕಸಭಾ ಕ್ಷೇತ್ರ: ಅಂಧ ವ್ಯಕ್ತಿಯಿಂದ ಉಮೇದುವಾರಿಕೆ ಸಲ್ಲಿಕೆ
ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು.
ಬೀದರ್‌ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್‌ ನಾಗಪ್ಪ ಬೂಸಾ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.
ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿ,ಬ್ರೈಲ್‌ ಲಿಪಿ ಸಹಾಯದಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಯಾವುದೇ ಆಡಂಬರವಿಲ್ಲದೆ ಸರಳವಾಗಿ ಬೆರಳೆಣಿಕೆಯ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಇನ್ನು, ಯುನಿವರ್ಸ್ ಸಿಟಿಜನ್ ಪಕ್ಷದಿಂದ ವಿನಯ‌ ಬಿರಾದಾರ ಅವರು ಉಮೇದುವಾರಿಕೆ ಸಲ್ಲಿಸಿದರು. ಅವರು ಸಹಾಯಕ ಚುನಾವಣಾಧಿಕಾರಿ ಸಿದ್ರಾಮೇಶ್ವರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಮೊದಲ ದಿನ ಮಧ್ಯಾಹ್ನ 2ರ ವರೆಗೆ ಇಬ್ಬರು ಉಮೇದುವಾರಿಕೆ ಸಲ್ಲಿಸಿದರು. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಕ್ರಮ ವಾಗಿ ಏ.17, 18ರಂದು ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಕೆಗೆ ನಿರ್ಧರಿಸಿವೆ.