ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್’ಗೆ ಮುಖಭಂಗ
ರಾಮನಗರ:ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಸೋಲುಂಡಿದ್ದು, ಭಾರಿ ಮುಖಭಂಗವಾಗಿದೆ.
ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಬಾಲಕೃಷ್ಣ ವಿಜಯೋತ್ಸವ ಆಚರಿಸಿ ದ್ದಾರೆ. ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣ ಒಂದು ಕ್ಷೇತ್ರ ಬಿಟ್ಟು ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿದೆ.
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಕಾಂಗ್ರೆಸ್​ 133 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್​ 21 ಹಾಗೂ ಇತರೆ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ ಸ್ಪಷ್ಟಬಹುಮತ ಸಾಧಿಸಿದ್ದು, ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್​ ಆಗಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.\