ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್‌ನ ಸೆನ್ಸಾರ್‌ಗಳಲ್ಲಿ ವೈಫಲ್ಯ, ಆಕ್ರೋಶ
ಮೈಸೂರು:ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಭಾನುವಾರ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ‌ಟೋಲ್ ಸಂಗ್ರಹ ಮಾಡಲು ಮುಂದಾಗಿದೆ.
ಆದರೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದ್ದ ಮೊದಲ ದಿನವೇ ಟೋಲ್‌ನ ಸೆನ್ಸಾರ್‌ಗಳಲ್ಲಿ ವೈಫಲ್ಯ ಕಾಣಿಸಿ ಕೊಂಡಿದೆ.
ಟೋಲ್‌ ಸೆನ್ಸಾರ್‌ಗಳು ಕಾರ್ಯನಿರ್ವಹಿಸದ ಹಿನ್ನೆಲೆ, ಮೂರ್ನಾಲ್ಕು ಕಾರುಗಳು ಡ್ಯಾಮೇಜ್‌ ಆಗಿವೆ. ಇದರಿಂದ ರೊಚ್ಚಿಗೆದ್ದ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಟೋಲ್‌ನಲ್ಲಿದ್ದ ಸೆನ್ಸಾರ್‌ ಸರಿಯಾಗಿ ವರ್ಕ್ ಆಗದೇ ಹಲವು ವಾಹನ ಗಳಿಗೆ ಡ್ಯಾಮೇಜ್ ಆಗಿದೆ. ಭೀಮರ್ ಸೆನ್ಸಾರ್ ವೈಫಲ್ಯದಿಂದ ಮೂರ್ನಾಲ್ಕು ಕಾರುಗಳಿಗೆ ಡ್ಯಾಮೇಜ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ರೊಚ್ಚಿಗೆದ್ದ ವಾಹನ ಸವಾರರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಗೆಯೇ ಘಟನಾ ಸ್ಥಳದಲ್ಲಿ ಸ್ವಲ್ಪ ಸಮಯದವರೆಗೂ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.