ಕೈಗಾರಿಕಾ ಪ್ರದೇಶದಲ್ಲಿ 100 ಹಾಸಿಗೆಯ ಕಾರ್ಮಿಕರ ದವಾಖಾನೆ
100 ಹಾಸಿಗೆ ಇಎಸ್‌ಐ ಚಿಕಿತ್ಸಾಲಯ
21 ಸಾವಿರ ಕಾರ್ಮಿಕರಿಗೆ ಚಿಕಿತ್ಸೆ
ತುಮಕೂರು:ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮುತ್ತಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶ ದಲ್ಲಿ ರಾಜ್ಯದ 118ನೇ ಇಎಸ್‌ಐ ಚಿಕಿತ್ಸಾಲಯ ತೆರೆಯುವ ಮೂಲಕ ಕೈಗಾರಿಕೆಗಳ ಜೀವಾಳವಾಗಿರುವ ಕಾರ್ಮಿಕರ ಆರೋಗ್ಯರಕ್ಷಣೆಗೆ ಇಲಾಖೆ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಮಿಕರ ವೈದ್ಯಕೀಯ ಇಲಾಖೆಯ ನಿರ್ದೇಶಕ ಡಾ.ಎನ್.ಜಿ.ರವಿ ಕುಮಾರ್ ತಿಳಿಸಿದರು.
ನಗರದ ವಸಂತನರಸಾಪುರ ಮೊದಲ ಹಂತದ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ದವಾಖಾನೆ ನೀಡಿ ಮಾತನಾಡಿ, ಸದರಿ ಆಸ್ಪತ್ರೆಯಲ್ಲಿ ಮೊದಲ ಹಂತದ ಚಿಕಿತ್ಸೆಗಳು ದೊರೆಯಲಿದ್ದು,ಅತ್ಯಂತ ಗಂಭೀರ ಪ್ರಕರಣಗಳು ಕಂಡು ಬಂದರೆ ಈಗಾಗಲೇ ಇಲಾಖೆ ಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಸಿದ್ದಾರ್ಥ, ಸಿದ್ದಗಂಗಾ ಮತ್ತು ಶ್ರೀದೇವಿ ಮೆಡಿಕಲ್ ಕಾಲೇಜುಗಳಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು ಎಂದರು.
.ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗೇಶ್ ಮಾತನಾಡಿ, ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ತುರ್ತು ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕರ ವಿಮಾ ಇಲಾಖೆ ರಾಜ್ಯ ಘಟಕದಿಂದ ಒಂದು ವಿಮಾ ಚಿಕಿತ್ಸಾಲಯವನ್ನು ತೆರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದೇ ಜಾಗದಲ್ಲಿ ಕೇಂದ್ರ ಸರಕಾರದಿಂದ 100 ಬೆಡ್ ಆಸ್ಪತ್ರೆ ಸಹ ಮಂಜೂರಾಗಿದ್ದು, ಬಜೆಟ್‌ನಲ್ಲಿ ಹಣ ಮೀಸಲಿರಿಸಲಾಗಿದೆ. ಕೆ.ಐ.ಎ.ಡಿ.ಬಿ. ವತಿಯಿಂದ 5 ಎಕರೆ ಜಾಗ ನೀಡಲಾಗಿದೆ. ಎರಡು ವರ್ಷದಲ್ಲಿ ಆಸ್ಪತ್ರೆ ಆರಂಭವಾಗಲಿದೆ ಎಂದರು.
ವಸಂತನರಸಾಪುರ ಕೈಗಾರಿಕೆಗಳ ಸಂಘದ ಅಧ್ಯಕ್ಷ ಜಿ.ವಿ.ರಾಮಮೂರ್ತಿ ಮಾತನಾಡಿ, ಕಾರ್ಮಿಕರೇ ಕೈಗಾರಿಕೆಗಳ ಬೆನ್ನೆಲುಬು. ಸದರಿ ಕೈಗಾರಿಕಾ ಪ್ರದೇಶದಲ್ಲಿ ಪ್ರಸ್ತುತ 21 ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸರಕಾರ ಇಎಸ್‌ಐ ಚಿಕಿತ್ಸಾ ಲಯ ತೆರೆದಿದೆ.ಇದರ ಸದುಪಯೋಗವನ್ನು ಎಲ್ಲ ಕಾರ್ಮಿಕರು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ವಸಂತನರಸಾಪುರ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಹರೀಶ್ ಮಾತನಾಡಿ,2011ರಲ್ಲಿ ನಮ್ಮ ಸಂಘ ಸ್ಥಾಪನೆಯಾದ ಸಂದರ್ಭ ದಲ್ಲಿಯೇ ಎಸ್‌ಐ ಆಸ್ಪತ್ರೆ ತೆರೆಯಬೇಕೆಂದು ಮನವಿ ಸಲ್ಲಿಸಿದ್ದೆವು.ಇದರ ಭಾಗವಾಗಿಯೇ ಚಿಕಿತ್ಸಾ ಕೇಂದ್ರ ಆರಂಭ ಗೊ0ಡಿದೆ ಎಂದರು.
ಕಾರ್ಯಕ್ರಮದಲ್ಲಿ ಕೆಐಎಡಿಬಿ ಎಇಇ ಟಿ.ಎಸ್.ಲಕ್ಷ್ಮೀಶ್, ಜಂಟಿ ಕಾರ್ಯದರ್ಶಿ ಸತ್ಯನಾರಾಯಣ್, ಖಜಾಂಚಿ ಬಾಬುಲಾಲ್ ಜೈನ್, ಮಾನವ ಸಂಪನ್ಮೂಲ ಅಧಿಕಾರಿ ಮಹೇಶ್, ತುಮಕೂರು ಇಎಸ್‌ಐ ವೈದ್ಯ ಡಾ.ಆನಂದ್ ಮತ್ತಿತರರು ಉಪಸ್ಥಿತರಿದ್ದರು.
*
ವಸಂತ ನರಸಾಪುರ ಕೈಗಾರಿಕಾ ಪ್ರದೇಶದ ಐದು ಎಕರೆ ಜಾಗದಲ್ಲಿ ಸುಮಾರು 100 ಬೆಡ್‌ಗಳ ಕಾರ್ಮಿಕ ವಿಮಾ ಆಸ್ಪತ್ರೆ ಮುಂದಿನ ಒಂದೆರಡು ವರ್ಷಗಳಲ್ಲಿ ಆರಂಭವಾಗಲಿದೆ.
ಡಾ.ಎನ್.ಜಿ.ರವಿಕುಮಾರ್, ಇಎಸ್ಐ ನಿರ್ದೇಶಕ
 - 