ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು: ಸುಪ್ರೀಂ ಆದೇಶ
ನವದೆಹಲಿ:ಇಂದಿನಿಂದ ಒಂದು ವಾರದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾ ವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ.
ಬಿಬಿಎಂಪಿ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಂ ಖಾನಿಲ್ಕರ್ ಪೀಠ, ಎಂಟು ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಲಾಗಿತ್ತು, ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು ಮೀಸಲಾತಿ ಸಂಬಂಧ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿ ವರದಿಯನ್ನು ವಿಳಂಬವಾಗಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದರು.
ವಾದ ಆಲಿಸಿದ ಪೀಠ, ಇಂದಿನಿಂದ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು ಎಂದು ಆದೇಶ‌ ನೀಡಿತು. ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತು.