ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ
ಶಿವಮೊಗ್ಗ:ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು, ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಿದರು.
ಪಶ್ಚಿಮ ಘಟ್ಟಗಳ 10 ಜಿಲ್ಲೆಗಳನ್ನೊಳಗೊಂಡ 20 ಸಾವಿರಕ್ಕೂ ಅಧಿಕ ಚ.ಕಿ.ಮೀ. ಪ್ರದೇಶವನ್ನು ಕೇಂದ್ರದ ಪರಿಸರ ಇಲಾಖೆ ಅವೈಜ್ಞಾನಿಕವಾಗಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದ್ದು, ಇದು ಜನವಿರೋಧಿ, ಇದರಿಂದ ಅರಣ್ಯವಾಸಿ ಹಾಗೂ ಆದಿವಾಸಿಗಳ ಬದುಕನ್ನು ಕಸಿದುಕೊಂಡಂತಾಗುತ್ತದೆ. ಈಗಿರುವ ಅರಣ್ಯ ಮತ್ತು ವನ್ಯ ಜೀವಿ ಸಂರಕ್ಷಣೆಯ ಕಾನೂನು ಗಳನ್ನೇ ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಸಾಕು ಎಂದು ಪ್ರತಿಭಟನಾಕಾರರು ತಿಳಿಸಿದರು.
ತಕ್ಷಣವೇ ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು. ಬೆಂಗಳೂರಿನಲ್ಲಿ ಜು. 18 ರಂದು ಮಲೆನಾಡು ಭಾಗದ ಶಾಸಕರ, ಜನಪ್ರತಿನಿಧಿಗಳ ಸಭೆ ನಡೆಯಲಿದೆ.
ಈ ಸಭೆಯಲ್ಲಿ ವರದಿ ಜಾರಿಗೊಳಿಸದಂತೆ ತೀರ್ಮಾನ ತೆಗೆದು ಕೊಂಡು ಕೇಂದ್ರಕ್ಕೆ ರಾಜ್ಯ ಸರ್ಕಾರ ತಿಳಿಸಬೇಕು ಎಂದು ಮನವಿ ಯಲ್ಲಿ ಒತ್ತಾಯಿಸಲಾಗಿದೆ.